ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.
ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ” ಎಂದು ವಿವರಿಸಿದರು.
“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.
200% ಮಾದಪ್ಪನಾಣೆಗೂ ಡಿಕೆಶಿ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಭವಿಷ್ಯ | DK Shivakumar
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


