ಬೆಂಗಳೂರು: ಮಲೆನಾಡು ಹಾಗೂ ಕರಾವಳಿಯ 7 ಜಿಲ್ಲೆಗಳಲ್ಲಿ ಭೂಕುಸಿತವನ್ನು ತಡೆಗಟ್ಟಲು 500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ವಿಧಾನಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಡಾ.ಮಂಥರ್ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾರತೀಯ ಭೂ ವೈಜ್ಞಾನಿಕ ಸಮೀಕ್ಷೆ(ಜಿಎಸ್ಐ)ಯು ಸಮೀಕ್ಷೆ ನಡೆಸಿ ಗುರುತಿಸಿದ ಮಲೆನಾಡುಭಾಗದ 4, ಕರಾವಳಿಯ 2 ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಗುಡ್ಡ ಕುಸಿತ ತಡೆಗಟ್ಟುವ ಸಲುವಾಗಿ ದೂರಗಾಮಿ ಯೋಜನೆಗಳನ್ನು ಕೈಗೊಳ್ಳಲು ಒಟ್ಟು 500 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
ಅದರಲ್ಲಿ ಕೊಡಗು ಜಿಲ್ಲೆಗೆ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ದವಿದೆ ಎಂದರು.
ಪ್ರಕೃತಿಗೆ ವಿರುದ್ಧ ಕಾರ್ಯಾಚರಣೆಗಳಲ್ಲಿ ಫಲಿತಾಂಶ ಎಷ್ಟರ ಮಟ್ಟಿಗೆ ಯಶಸ್ಸು ಆಗಲಿದೆ ಎಂಬುದು ತಮಗೆ ಗೊತ್ತಿಲ್ಲ. ನಾನು ಈ ವಿಚಾರವಾಗಿ ತಜ್ಞನಲ್ಲ. ಜಿಎಸ್ಐ ಸಂಸ್ಥೆ ಗುರುತಿಸಿದ ಜಾಗಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ತಜ್ಞರು ಹೇಳಿದ ರೀತಿಯಲ್ಲೂ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಒಂದು ವೇಳೆ ಈ ವಿಚಾರವಾಗಿ ಬೇರೆ ಸಂಸ್ಥೆಗಳ ತಜ್ಞ ಸೇವೆ ಲಭ್ಯವಿದ್ದರೆ ಅದನ್ನೂ ಪಡೆದುಕೊಳ್ಳಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.
ಮುಂದಿನ 2 ತಿಂಗಳ ಒಳಗಾಗಿ ಗುಡ್ಡ ಕುಸಿತ ತಡೆಗೆ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಬಿಜೆಪಿಯ ಸುನೀಲ್ಕುಮಾರ್ ನೀರಿನ ಕೊರೆತದ ಜಾಗಗಳನ್ನು ಸರಿಪಡಿಸುವ ಯೋಜನೆ ಕೈಗೆತ್ತಿಕೊಳ್ಳಬೇಕು. ಕೇವಲ ಗುಡ್ಡಕುಸಿತ ಪರಿಗಣಿಸಿದರೆ ಮಲೆನಾಡು ಭಾಗದ ಮೂಲ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಹೇಳಿದರು.
ಮಾನವ ಹಕ್ಕು ಆಯೋಗದ ಅಧಿಕಾರಿಯೆಂದು ಸುಳ್ಳು ಹೇಳಿದ ಆರೋಪ; ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


