ಕನ್ನಡ ರಾಜ್ಯೋತ್ಸವ 2025ರ ಹಿನ್ನಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಕನ್ನಡದಲ್ಲಿಯೇ ಪೋಸ್ಟ್ ಹಾಕಿದ್ದಾರೆ.
ಕನ್ನಡ ರಾಜ್ಯೋತ್ಸವಕ್ಕೆ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಶುಭಾಶಯಗಳನ್ನು ಹೇಳಿದ್ದಾರೆ. ‘ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಮೋದಿ ಪೋಸ್ಟ್: ಪ್ರಧಾನಿ ಮೋದಿ, ‘ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದಾರೆ.
ಮುಖ್ಯಮಂತ್ರಿಗಳ ಶುಭಾಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ’ ಎಂದು ಹೇಳಿದ್ದಾರೆ.
‘ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ’ ಎಂದು ತಿಳಿಸಿದ್ದಾರೆ.
‘ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ. ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ “ಮಾನವ ಕುಲ ತಾನೊಂದೇ ವಲಂ” ಎಂದು ಹೇಳಿದ್ದು. ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು ಕೇವಲ ಶಬ್ದ-ವಾಕ್ಯಗಳಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ. ಅದು ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು’ ಎಂದು ಬಣ್ಣಿಸಿದ್ದಾರೆ.
‘ಕೇವಲ ಅಭಿಮಾನದಿಂದ ಭಾಷೆಯ ರಕ್ಷಣೆ ಸಾಧ್ಯ ಇಲ್ಲ. ಪ್ರತಿಯೊಬ್ಬ ಕನ್ನಡಿಗನೂ ರಾಜ್ಯದಲ್ಲಿ ಕನ್ನಡದಲ್ಲೇ ಮಾತನಾಡುವ, ವ್ಯವಹರಿಸುವ ಪ್ರತಿಜ್ಞೆಗೈಯ್ಯೋಣ. ಕನ್ನಡವನ್ನು ಬಳಸೋಣ, ಬೆಳೆಸೋಣ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಜೈ ಭುವನೇಶ್ವರಿ, ಜೈ ಕರ್ನಾಟಕ’ ಎಂದು ಶುಭಾಶಯ ಕೋರಿದ್ದಾರೆ.
ಡಿಕೆ ಶಿವಕುಮಾರ್ ಪೋಸ್ಟ್: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ರಾಜ್ಯದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ‘ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಾಶಯಗಳು. ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ನಿತ್ಯ ಬಳಸಿ, ಅದನ್ನು ಇನ್ನಷ್ಟು ಉತ್ತುಂಗಕ್ಕೇರಿಸುವ ಕಾರ್ಯ ನಮ್ಮೆಲ್ಲರ ಪರಮ ಕರ್ತವ್ಯ. ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ’ ಎಂದು ಪೋಸ್ಟ್ನಲ್ಲಿ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


