ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹಾಡುವಂತೆ ಕೇಳಿದ ಅಭಿಮಾನಿಯೊಬ್ಬರಿಗೆ “ಇದಕ್ಕೇನೇ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು” ಎಂದು ಹೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಕನ್ನಡಿಗರು ಕಿಡಿಕಾರಿದ್ದು, ಕರವೇ ನಾರಾಯಣಗೌಡರವರೂ ಸಹ ಸೋನು ನಿಗಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಂಧಿಸುವಂತೆ ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.
ನಾರಾಯಣಗೌಡರ ಟ್ವೀಟ್ನಲ್ಲಿ ಏನಿದೆ?
ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಗಾಯಕ ಸೋನು ನಿಗಮ್ ʻಇದಕ್ಕೇನೇ, ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼ ಎಂದು ಹೇಳಿದ್ದಾನೆ.
ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದರೆ ಅದು ಹೇಗೆ ಭಯೋತ್ಪಾದಕ ದಾಳಿಗೆ ಕಾರಣವಾಗಲು ಸಾಧ್ಯ? ಕನ್ನಡದ ಅನ್ನ ತಿಂದು ಕೊಬ್ಬಿರುವ ಈತ ಅದು ಹೇಗೆ ಕರ್ನಾಟಕದಲ್ಲಿ ಇನ್ನು ಮೇಲೆ ಶೋಗಳನ್ನು ನಡೆಸುತ್ತಾನೆ ನೋಡೋಣ.
ಕರ್ನಾಟಕದ ಯಾವ ನಿರ್ಮಾಪಕರೂ ಈತನಿಂದ ಹಾಡು ಹಾಡಿಸಬಾರದು. ಯಾವುದೇ ಸಂಸ್ಥೆಗಳು ಇವನ ಶೋ ನಡೆಸಲು ಮುಂದಾಗಬಾರದು. ಒಂದು ವೇಳೆ ಯಾರಾದರೂ ಈ ದುಸ್ಸಾಹಸ ಮಾಡಿದರೆ ಅವರೇ ಬೆಲೆ ತೆರಬೇಕಾಗುತ್ತದೆ.
ಸೋನು ನಿಗಮ್ ನೀಡಿರುವ ಹೇಳಿಕೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ, ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಅವರನ್ನು ಖಳನಾಯಕರನ್ನಾಗಿ ಮಾಡುವ ಹುನ್ನಾರ ಹೊಂದಿದೆ. ಹೀಗಾಗಿ ಅವನ ಮೇಲೆ ಈ ಕೂಡಲೇ ದೂರು ದಾಖಲಾಗಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತ್ತೇನೆ. ಇಂಥ ಕೃತಘ್ನರನ್ನು ಕರ್ನಾಟಕದ ನೆಲದಲ್ಲಿ ಅನ್ನ ಹಾಕಿ ಸಾಕುವುದನ್ನು ಇನ್ನು ಮುಂದಾದರೂ ನಾವು ಕೈಬಿಡಬೇಕು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


