ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕರು ನೀಡುತ್ತಿರುವ ಹೇಳಿಕೆಗಳು ವೈಯಕ್ತಿಕ ಅಭಿಪ್ರಾಯಗಳೇ ಹೊರತು ಪಕ್ಷದ ತೀರ್ಮಾನವಲ್ಲ. ಹೀಗಾಗಿ ಅವುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರದ ಶಾಸಕ ಇಕ್ಬಾಲ್ ಹುಸೇನ್, ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗ ಸೇರಿದಂತೆ ಇನ್ನೂ ಕೆಲವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಅದಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದರು.
ಸೆಪ್ಟಂಬರ್ ಕ್ರಾಂತಿಯ ಬಗ್ಗೆ ಈ ಹಿಂದೆ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಕೆ.ಎನ್.ರಾಜಣ್ಣ ಇಂದು ತಣ್ಣಗಾದಂತೆ ಕಂಡುಬಂದಿತ್ತು. ರಾಜಕೀಯ ಕ್ರಾಂತಿ ಎಲ್ಲಾ ಪಕ್ಷದಲ್ಲೂ ಇದ್ದೇ ಇರುತ್ತದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಬದಲಾವಣೆಯಾಗುತ್ತದೆ ಎಂದು ಕಾದು ನೋಡೋಣ ಎಂದು ಹೇಳುವ ಮೂಲಕ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂಡೆಯ ರೀತಿ 5 ವರ್ಷ ಆಡಳಿತ ನಡೆಸುತ್ತದೆ. ಸರ್ಕಾರ ಇದ್ದಮೇಲೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೂ ಇರುತ್ತಾರೆ. ನಂತರದ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಗೆದ್ದು ಸರ್ಕಾರ ರಚನೆಯಾಗಲಿದೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿಯ ಇತರರು ಕಾಂಗ್ರೆಸ್ನ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಅವರ ಪಕ್ಷದ ಬಗ್ಗೆ ನೋಡಿಕೊಳ್ಳಲಿ. ನಮ್ಮಲ್ಲಿ ಮಾರ್ಗದರ್ಶನ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಬಹಳಷ್ಟು ಮಂದಿ ಇದ್ದಾರೆ. ಬಿಜೆಪಿಯವರು ಕಾಂಗ್ರೆಸ್ಗೆ ಬದಲಾಗಿ ತಮ್ಮದೇ ಪಕ್ಷದ ಉಸಾಬರಿ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಎಐ ಕನ್ನಡ ಕೃಷಿ ವೆಬ್ಸೈಟ್ಗೆ ಇಲ್ಲಿ ಕ್ಲಿಕ್ ಮಾಡಿ
ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ: ಡಿಕೆ ಶಿವಕುಮಾರ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


