ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಕೋರ್ಟ್ ಆದೇಶ ನೀಡಿದೆ, ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಈಗ ಹೆಚ್.ಡಿ.ರೇವಣ್ಣ ಮತ್ತೊಬ್ಬ ಪುತ್ರ ಸೂರಜ್ ರೇವಣ್ಣ ಪ್ರಕರಣದಲ್ಲಿಯೂ ರೇವಣ್ಣ ಕುಟುಂಬಕ್ಕೆ ಸಂಕಷ್ಟ ಬಂದಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಸೂರಜ್ ರೇವಣ್ಣ ವಿರುದ್ಧ ಸಲ್ಲಿಕೆಯಾಗಿದ್ದ ಬಿ-ರಿಪೋರ್ಟ್ ಅನ್ನು ಕೋರ್ಟ್ ತಿರಸ್ಕಾರ ಮಾಡಿದೆ, ಮರು ತನಿಖೆಗೆ ಆದೇಶಿಸಿದೆ.
27 ವರ್ಷದ ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಸೂರಜ್ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಪೊಲೀಸರು ಯಾವುದೇ ಸಾಕ್ಷ್ಯಾಧಾರಗಳಿಲ್ಲ, ಆರೋಪಕ್ಕೆ ಸಂಬಂಧಿಸಿದಂತೆ ಸಾಂದರ್ಭಿಕ ಸಾಕ್ಷಿಗಳು ಇಲ್ಲ ಎಂದು ಬಿ-ರಿಪೋರ್ಟ್ ಅನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು.
ಆದರೆ ಕೋರ್ಟ್ಗೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದನ್ನು ದೂರುದಾರರು ಪ್ರಶ್ನೆ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಬಿ-ರಿಪೋರ್ಟ್ ತಿರಸ್ಕಾರ ಮಾಡಿದೆ. ಮರು ತನಿಖೆ ಮಾಡಿ ಡಿಸೆಂಬರ್ 29ಕ್ಕೆ ವರದಿ ಸಲ್ಲಿಕೆ ಮಾಡಿ ಎಂದು ಆದೇಶವನ್ನು ಮಾಡಿದೆ.
ಸೂರಜ್ ರೇವಣ್ಣಗೆ ಸಂಕಷ್ಟ: ಈಗ ಬಿ-ರಿಪೋರ್ಟ್ ತಿರಸ್ಕಾರ ಆಗಿರುವ ಕಾರಣ ಸೂರಜ್ ರೇವಣ್ಣ ಮತ್ತೆ ಮರು ತನಿಖೆ ಎದುರಿಸಬೇಕಿದೆ. ಈ ಪ್ರಕರಣದಲ್ಲಿ ಪೊಲೀಸರು ಸೂರಜ್ ರೇವಣ್ಣ ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ಅವರು ಹೊರಬಂದಿದ್ದರು.
ಸೂರಜ್ ರೇವಣ್ಣ ಜೆಡಿಎಸ್ ಪಕ್ಷದ ಯುವ ನಾಯಕ, ಹಾಲಿ ವಿಧಾನ ಪರಿಷತ್ ಸದಸ್ಯ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗ ಮತ್ತೆ ನಡೆಯುವ ತನಿಖೆಯ ವರದಿ ಏನು ಬರಲಿದೆ? ಎನ್ನುವುದು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ವಿರುದ್ಧವಾಗಿ ವರದಿ ಬಂದರೆ ಜೈಲು ಸೇರಬೇಕಾಗುತ್ತದೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಹೆಚ್.ಡಿ.ರೇವಣ್ಣ ಕುಟುಂಬಕ್ಕೆ ನೋವು ತಂದಿದೆ. ಈಗ ಸೂರಜ್ ರೇವಣ್ಣ ವಿರುದ್ಧ ಮರು ತನಿಖೆಗೆ ಕೋರ್ಟ್ ಆದೇಶಿಸಿದೆ. ಆದ್ದರಿಂದ ರೇವಣ್ಣ ಕುಟುಂಬಕ್ಕೆ ಸಂಕಷ್ಟ ಬಂದಿದೆ.
ಸೂರಜ್ ರೇವಣ್ಣ ವಿರುದ್ಧ ಮೊದಲು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ತನಿಖೆ ನಡೆಸಿದ ಸಿಐಡಿ ಪೊಲೀಸರು ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಲಭ್ಯವಿಲ್ಲದ ಕಾರಣ ಬಿ-ರಿಪೋರ್ಟ್ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಸೂರಜ್ ರೇವಣ್ಣರನ್ನು 2024ರ ಜೂನ್ 23 ರಂದು ಪೊಲೀಸರು ಬಂಧಿಸಿದ್ದರು. ಜುಲೈ 22ರಂದು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ತಮ್ಮ ವಿರುದ್ಧ ದೂರು ದಾಖಲಾದ ಬಳಿಕ ಸೂರಜ್ ರೇವಣ್ಣ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು.
ಸೂರಜ್ ರೇವಣ್ಣ ಈ ದೂರು ನೀಡಲು ಪೊಲೀಸ್ ಠಾಣೆಗೆ ಬಂದಾಗ ಅವರನ್ನು ವಿಚಾರಣೆ ನಡೆಸಿ, ಪೊಲೀಸರು ಬಂಧಿಸಿದ್ದರು. 5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್ಮೇಲ್ ಮಾಡಿದ್ದರು ಎಂದು ಸೂರಜ್ ರೇವಣ್ಣ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಬೆಳವಣಿಗೆಗಳ ನಂತರ ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


