ಬೆಂಗಳೂರು: ಕರ್ನಾಟಕದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ರಾಜ್ಯದಲ್ಲಿ ದ್ವೇಷ ಭಾಷಣ ಸಾಬೀತಾದರೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ನಗದು ದಂಡ ವಿಧಿಸಲು ಅವಕಾಶ ಮಾಡಿಕೊಡುವಂಥ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ-2025 ಕರಡನ್ನು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಅವರು, ಇದರಡಿ ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ.
ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ.
ಈಗಾಗಲೇ ಭಾರತೀಯ ನಾಗರಿಕ ದಂಡ ಸಂಹಿತೆಯಲ್ಲಿ ದ್ವೇಷ ಭಾಷಣ ನಿಷಿದ್ಧವಾದರೂ ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ವಿಸ್ತೃತವಾಗಿ ಕರಡು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ತಡೆಗಟ್ಟುವಿಕೆ ಮತ್ತು ಶಿಕ್ಷಿಸುವ ವಿಧೇಯಕ 2025ದ ಪ್ರಕಾರ ಅಪರಾಧಗಳ ಪಟ್ಟಿಯನ್ನು ವಿಧೇಯಕದಲ್ಲಿ ಇದೆ. ಇದರ ಪ್ರಕಾರ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲಿದೆ. ಅಥವಾ 5 ಸಾವಿರ ರುವರೆಗೆ ದಂಡ ಮತ್ತು ಈ ಎರಡನ್ನೂ ವಿಧಿಸಲಿದೆ.
ಅದೇ ರೀತಿ ಧಾರ್ಮಿಕ, ಜನಾಂಗೀಯ, ಜಾತಿ, ಸಮುದಾಯ, ಲಿಂಗ, ಹುಟ್ಟಿನ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟಿನ ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವಂತೆ ಉದ್ದೇಶಪೂರ್ವಕವಾಗಿ ಪ್ರಕಟಿಸುವವರು, ಪ್ರಚಾರ ಮಾಡುವವರು ಅಥವಾ ಸಮರ್ಥಿಸುವವರು, ವಕಾಲತ್ತು ವಹಿಸುವವರನ್ನೂ ಶಿಕ್ಷೆಗೆ ಗುರಿಪಡಿಸಲಿದೆ.
ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಇದರಲ್ಲಿ ಒಳಗೊಂಡಿದೆ. ಇದರ ಮಾಹಿತಿಯು ದತ್ತಾಂಶ, ಸಂದೇಶ, ಪಠ್ಯ, ಚಿತ್ರಗಳು, ಧ್ವನಿ, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂಗಳು ಸಾಫ್ಟ್ವೇರ್ ಮತ್ತು ಡೇಟಾಬೇಸ್ಗಳು ಅಥವಾ ಮೈಕ್ರೋಫಿಲ್ಡ್ ಅಥವಾ ಕಂಪ್ಯೂಟರ್ ರಚಿತ ಮೈಕ್ರೋಫಿಚೆಗಳನ್ನು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದ ವ್ಯಾಪ್ತಿಗೆ ಒಳಪಡಿಸಿದೆ.
ಅಲ್ಲದೇ ಯಾವುದೇ ನಿರ್ದಿಷ್ಟ ಎಲೆಕ್ಟ್ರಾನಿಕ್ ದಾಖಲೆಗಳಿಗೆ ಸಂಬಂಧಿಸಿದಂತೆ ಮಧ್ಯವರ್ತಿ ಎಂದರೆ, ಇನ್ನೊಬ್ಬ ವ್ಯಕ್ತಿಯ ಪರವಾಗಿ ಆ ದಾಖಲೆಯನ್ನು ಸ್ವೀಕರಿಸುವ, ಸಂಗ್ರಹಿಸುವ ಅಥವಾ ರವಾನಿಸುವ ಅಥವಾ ಆ ದಾಖಲೆಗೆ ಸಂಬಂಧಿಸಿದಂತೆ ಯಾವುದೇ ಸೇವೆಯನ್ನು ಒದಗಿಸುವ ಯಾವುದೇ ವ್ಯಕ್ತಿ ಮತ್ತು ಪ್ರಸಾರ ಮಾಡುವ ವಾಹಿನಿಗಳು (ಚಾನೆಲ್ಗಳು), ಟೆಲಿಕಾಂ ಸೇವಾ ಪೂರೈಕೆದಾರರು, ನೆಟ್ವರ್ಕ್ ಸೇವಾ ಪೂರೈಕೆದಾರರು, ಇಂಟರ್ನೆಟ್ ಸೇವಾ ಪೂರೈಕೆದಾರರು, ವೆಬ್ಹೋಸ್ಟಿಂಗ್ ಸೇವಾ ಪೂರೈಕೆದಾರರು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್ ಇಂಜಿನ್ಗಳು ಆನ್ಲೈನ್ ಪಾವತಿ ಸೈಟ್ಗಳು, ಆನ್ಲೈನ್-ಹರಾಜು ಸೈಟ್ಗಳು, ಆನ್ಲೈನ್-ಮಾರುಕಟ್ಟೆಗಳುವ ಮತ್ತು ಸೈಬರ್ ಕೆಫೆಗಳನ್ನೂ ಇದರ ವ್ಯಾಪ್ತಿಗೆ ಸೇರಿಸಿದೆ..
ದ್ವೇಷ ಭಾಷಣವು ದೇಶದ ಜಾತ್ಯತೀತ ಸಂರಚನೆಗೆ ಮಾಡುವಷ್ಟು ಸಮರ್ಥವಾಗಿರುವ ಗಂಭೀರ ಅಪರಾಧ ಎಂದು ಸುಪ್ರಿಂ ಕೋರ್ಟ್ ಇತ್ತೀಚೆಗಷ್ಟೇ ವ್ಯಾಖ್ಯಾನಿಸಿತ್ತು.
ಜತೆಗೆ ಯಾವುದೇ ದೂರು ದಾಖಲಾಗದೆ ಇದ್ದರೂ ದ್ವೇಷ ಭಾಷಣ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ఎల్ల ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ತಡೆಗಟ್ಟುವಿಕೆ ಮತ್ತು ಶಿಕ್ಷಿಸುವ ವಿಧೇಯಕವನ್ನು ರೂಪಿಸಿದೆ.
ಮಸೂದೆಯಲ್ಲಿ ಏನಿದೆ?
>. ಭಾಷೆ, ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ ವಿಚಾರವಾಗಿ ದ್ವೇಷ ಭಾಷಣ ಮಾಡುವಂತಿಲ್ಲ
>. ಯಾವುದೇ ವ್ಯಕ್ತಿಗೆ ಹಾನಿ ಮಾಡುವ, ದ್ವೇಷ ಉತ್ತೇಜಿಸುವ, ಅದನ್ನು ಪ್ರಚಾರ ಮಾಡುವ ವ್ಯಕ್ತಿ ಅಥವಾಗುಂಪಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ, 5 ಸಾವಿರ ತನಕ ದಂಡ
>. ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಶಿಕ್ಷೆ ವ್ಯಾಪ್ತಿಗೆ.
>. ಯಾವುದೇ ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಮ್ಗಳು ಸಾಫ್ಟ್ವೇರ್ ಮತ್ತು ಡೇಟಾಬೇಸ್ಗಳು ಕಾನೂನು ವ್ಯಾಪ್ತಿಗೆ ತಂದು ಕುಣಿಕೆ.
>. ಇನ್ನೊಬ್ಬ ವ್ಯಕ್ತಿಯ ಪರವಾಗಿ ಆ ದಾಖಲೆಯನ್ನು ಸ್ವೀಕರಿಸುವ, ಸಂಗ್ರಹಿಸುವವರು ಶಿಕ್ಷೆ ವ್ಯಾಪ್ತಿಗೆ ಒಳಪಡಲಿದೆ.
ಬಾಡಿಗೆದಾರರಿಗೆ ಬಿಗ್ ರಿಲೀಫ್! ಇನ್ಮುಂದೆ 10 ತಿಂಗಳ ಠೇವಣಿ ಇಲ್ಲ, 2 ತಿಂಗಳ ಅಡ್ವಾನ್ಸ್ ಮಾತ್ರ: ಹೊಸ ನಿಯಮಗಳು ಜಾರಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


