ಬೆಂಗಳೂರು: ಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಮೀಸಲು ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಾಡುಗೊಲ್ಲ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.
ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಪ್ರಶ್ನೆ ಕೇಳಿ ಗೊಲ್ಲ ಹಾಗೂ ಕಾಡುಗೊಲ್ಲ ಸಮುದಾಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ. ನಿಗಮ ಸ್ಥಾಪನೆ ಮಾಡಿದ್ದರೂ ಅದಕ್ಕೆ ಅನುದಾನ ನೀಡಿಲ್ಲ. ಸಮುದಾಯದ ಸ್ಥಿತಿ ಅತ್ತೂ ಇಲ್ಲ, ಇತ್ತೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಶಿವರಾಜ ತಂಗಡಗಿ, ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸಿಲ್ಲ. ಸಮುದಾಯಕ್ಕಾಗಿ ರಚಿಸಿರುವ ಪ್ರತ್ಯೇಕ ನಿಗಮ ಇನ್ನೂ ನೋಂದಾವಣಿ ಆಗಿರಲಿಲ್ಲ. ಈ ವರ್ಷ ನೋಂದಾವಣಿ ಪೂರ್ಣಗೊಂಡಿದ್ದು, ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಪ್ರವರ್ಗ-1ರಲ್ಲಿದ್ದ ಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅನಂತರ ಗೊಲ್ಲ ಮತ್ತು ಕಾಡುಗೊಲ್ಲ ಎಂಬ ಸಮಸ್ಯೆಗಳು ಉದ್ಭವಿಸಿವೆ ಎಂದು ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ಶಾಸಕ ಟಿ.ಬಿ.ಜಯಚಂದ್ರ , ತಾವು ಕಾನೂನು ಸಚಿವರಾಗಿದ್ದಾಗಲೇ ಹೊಸ ಕೆಟಗಿರಿಯನ್ನು ಸೃಷ್ಟಿ ಮಾಡಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ 8 ವರ್ಷಗಳ ಮೇಲಾಗಿದೆ. ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿದೆ. ಆದರೆ ರಾಜ್ಯದಿಂದ ಯಾವುದಕ್ಕೂ ಉತ್ತರ ನೀಡಿಲ್ಲ. ಮೈಸೂರು ವಿವಿಯಿಂದ ಕುಲಶಾಸೀಯ ಅಧ್ಯಯನ ನಡೆದಿದ್ದು ಅದರ ವರದಿ ಪಡೆದು ಕೇಂದ್ರಕ್ಕೆ ಸ್ಪಷ್ಟನೆ ನೀಡುವುದಾಗಿ ಹೇಳಲಾಗುತ್ತಿದೆ. ಮೊದಲು ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರ್ಪಡೆಯಾಗಲಿ. ನಂತರ ಗೊಲ್ಲ ಸಮುದಾಯವನ್ನು ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು. ಇದಕ್ಕೆ ಶಿವಲಿಂಗೇಗೌಡ, ಬಿಜೆಪಿಯ ಸುರೇಶ್ಗೌಡ, ಜೆಡಿಎಸ್ನ ಸುರೇಶ್ಬಾಬು, ಕಾಂಗ್ರೆಸ್ನ ಬಸಂತಪ್ಪ ಮತ್ತಿತರರು ಧ್ವನಿಗೂಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


