ನವೆಂಬರ್ ಕ್ರಾಂತಿ, ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕರ್ನಾಟಕ ರಾಜಕೀಯದಲ್ಲಿ ಸದ್ಯ ಚರ್ಚೆಯ ವಿಚಾರ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಮಗಿಸಿ ಬಂದಿದ್ದಾರೆ. ನವೆಂಬರ್ 15ರ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಕರ್ನಾಟಕದ ರಾಜಕೀಯ ಬೆಳವಣಿಗೆ ಮತ್ತು ನಾಯಕರ ಹೇಳಿಕೆಗಳ ನಡುವೆಯೇ ಹೈಕಮಾಂಡ್ ನೇಮಿಸಿದ ನಾಯಕರೊಬ್ಬರು ಬೆಂಗಳೂರಿನಲ್ಲಿ ರಹಸ್ಯ ಸಭೆಗಳನ್ನು ಮಾಡಿದ್ದಾರೆ. ಈ ಸಭೆಯ ವರದಿಯನ್ನು ಅವರು ಹೈಕಮಾಂಡ್ಗೆ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಬೆಂಗಳೂರಿಗೆ ಕಾಂಗ್ರೆಸ್ ವೀಕ್ಷಕರಾಗಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆಗಮಿಸಿದ್ದರು. ಅವರು ನಾಲ್ಕು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಚಿವರು, ಹಿರಿಯ ನಾಯಕರ ಸಭೆಗಳನ್ನು ಮಾಡಿದ್ದಾರೆ.
ವರದಿ ಕೇಳಿದ್ದ ಹೈಕಮಾಂಡ್: ಪಿ.ಚಿದಂಬರಂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ. ಪಕ್ಕದ ತಮಿಳುನಾಡು ರಾಜ್ಯದ ಅವರು ಕರ್ನಾಟಕದ ರಾಜಕೀಯವನ್ನು ರಾಜಕೀಯ ನಾಯಕರನ್ನು ಚೆನ್ನಾಗಿ ಬಲ್ಲರು. ಆದ್ದರಿಂದ ಅವರನ್ನು ವೀಕ್ಷಕರಾಗಿ ಕಳಿಸಿ, ಹೈಕಮಾಂಡ್ ವರದಿ ಕೇಳಿತ್ತು.
ಪಿ.ಚಿದಂಬರಂ ನಗರದಲ್ಲಿ ಗೌಪ್ಯ ಸಭೆ ಮಾಡಿದ್ದು, ಸಿಎಂ ಬದಲಾವಣೆ, ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಈ ಸಭೆ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಹೈಕಮಾಂಡ್, ಕರ್ನಾಟಕದಲ್ಲಿ ಮಹತ್ವ ಬದಲಾವಣೆ ಬಗ್ಗೆ ಚಿಂತನೆ ನಡೆಸಿದೆ? ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ.
ನವೆಂಬರ್ 20ಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತದೆ. ಆದ್ದರಿಂದ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ. ಈಗಾಗಲೇ ಹಲವು ಹಿರಿಯ ಸಚಿವರು ತಾವು ಸಚಿವ ಸ್ಥಾನ ಬಿಡಲು ಸಿದ್ಧ ಎಂದು ಹೇಳಿದ್ದಾರೆ.
ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆ ಮಾಡಿ, ಹೊಸ ಮುಖಗಳಿಗೆ ಆದ್ಯತೆ ನೀಡುವುದು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಎಂದು ನಡೆಯುತ್ತಿರುವ ಬಣ ರಾಜಕೀಯಕ್ಕೆ ತಡೆ ಹಾಕುವುದು ಕಾಂಗ್ರೆಸ್ ತಂತ್ರವಾಗಿದೆ.
ಪಿ.ಚಿದಂಬರಂ ವರದಿ ಕೊಟ್ಟ ಬಳಿಕ ಎಐಸಿಸಿ ಈ ಕುರಿತು ಪರಿಶೀಲನೆ ನಡೆಸಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದವರೇ ಆದ್ದರಿಂದ ರಾಜ್ಯ ರಾಜಕೀಯ ಚೆನ್ನಾಗಿ ಬಲ್ಲರು. ಅವರು ವರಿಷ್ಠರಿಗೆ ವಿವರಣೆ ನೀಡಿ, ಬದಲಾವಣೆ ಮಾಡಬಹುದು ಎಂಬುದು ಲೆಕ್ಕಾಚಾರವಾಗಿದೆ.
ಗುರುವಾರ ದೆಹಲಿಯಲ್ಲಿ ಮಾತನಾಡಿದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿಯೂ ಇಲ್ಲ. ಜನವರಿ, ಫೆಬ್ರವರಿಗೂ ಕ್ರಾಂತಿ ಆಗುವುದಿಲ್ಲ. ಕ್ರಾಂತಿ ಆಗುವುದೇನಿದ್ದರೂ 2028ರಲ್ಲಿ. ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಹೇಳಿದ್ದಾರೆ.
“ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದೀರಾ? ಎಂಬ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು.
ಮೈಸೂರಿನಲ್ಲಿ ಮಾತನಾಡಿದ್ದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, “ನವೆಂಬರ್ನಲ್ಲಿ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಯಾವಾಗ ಏನು ಆಗಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರಿದ್ದಾರೆ” ಎಂದು ಹೇಳಿದ್ದರು.
ಸಚಿವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ, “ಯಾವುದೇ ನವೆಂಬರ್ ಕ್ರಾಂತಿಯೂ ಇಲ್ಲ, ಸಿದ್ದರಾಮಯ್ಯನವರ ಕುರ್ಚಿ ಗಟ್ಟಿಯಾಗಿದೆ. ಇದು ಕಾಂಗ್ರೆಸ್ ಪಕ್ಷ. ಇಲ್ಲಿ ಯಾವುದೇ ನಿರ್ಧಾರ ಹೈಕಮಾಂಡ್ನಿಂದ ಆಗುತ್ತದೆ” ಎಂದು ಸ್ಪಷ್ಟಡಿಸಿದ್ದರು.
ಡಿ.ಕೆ.ಶಿವಕುಮಾರ್ ಬಣ ನಾಯಕತ್ವ ಬದಲಾವಣೆಗೆ ಮತ್ತು ಸಿದ್ದರಾಮಯ್ಯ ಬಣ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಬೇಡಿಕೆ ಇಟ್ಟಿದೆ ಎಂಬ ಚರ್ಚೆ ನಡೆಯುತ್ತಿದೆ. ಈ ನಡುವೆ ಬೆಂಗಳೂರಿನಲ್ಲಿ ಗುಪ್ತ ಸಭೆ ನಡೆದಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


