ಬೆಂಗಳೂರು: ಶಸ್ತ್ರಾಸ್ತ್ರಗಳ ಮೂಲಕವೇ ಸಮಾಜದಲ್ಲಿ ಸಮಾನತೆ ತರಲು ಮುಂದಾಗಿ ಚಿಕ್ಕಮಗಳೂರು, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಹಲವು ದಶಕಗಳಿಂದ ಹೋರಾಟ ನಡೆಸುತ್ತಿದ್ದ ನಕ್ಸಲೀಯರು ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ನಾಯಕಿ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಸೇರಿದಂತೆ ಒಟ್ಟು ಆರು ಜನ ನಕ್ಸಲ್ರು ಶರಣಾಗಲಿದ್ದಾರೆ.
ನಕ್ಸಲ್ ಪುನರ್ವಸತಿ ಸಮಿತಿ ಮುಖಂಡರು ನಕ್ಸಲೀಯರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಹಲವು ದಿನಗಳಿಂದ ಹೋರಾಟ ನಡೆಸುತ್ತಲೇ ಇದ್ದರು. ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಿದ ಬೆನ್ನಲ್ಲೇ ಆರು ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತೊರೆದು ಶರಣಾಗತಿಗೆ ಸಮ್ಮತಿಸಿದ್ದಾರೆ.
ಇಂದು ಬೆಳಗ್ಗೆ 8ರಿಂದ 10 ಗಂಟೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶರಣಾಗತಿ ಕಾರ್ಯಕ್ರಮ ನಡೆಯಲಿದೆ. ವಿಶೇಷವೆಂದರೆ ನಕ್ಸಲೀಯರಾದ ಚಿಕ್ಕಮಗಳೂರು ಜಿಲ್ಲೆ ಬುಕಡಿಬೈಲ್ನ ಲತಾ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರಿನ ಸುಂದರಿ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಈ ಆರು ಮಂದಿ ನಕ್ಸಲೀಯರು ಶರಣಾಗಲಿದ್ದಾರೆ. ಅವರನ್ನು ಕಾಡಿನಿಂದ ನಾಡಿಗೆ ಕರೆತರಲು ನಕ್ಸಲ್ ಪುನರ್ವಸತಿ ಸಮಿತಿಯ ಮುಖಂಡರು ವಿಶೇಷ ಕಾಳಜಿ ವಹಿಸಿದ್ದಾರೆ.
ಎಲ್ಲಿಂದ ಬಂದು ಶರಣಾಗಲಿದ್ದಾರೆ ಎಂಬ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗಿದ್ದು, ಮೂಲಗಳ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸಿನ ಹಾಡ್ಯದ ಮೂಲಕ ಕರೆತರಲಾಗುತ್ತದೆ ಎಂದು ಹೇಳಲಾಗುತ್ತದೆ. ಸರ್ಕಾರದ ಮುಂದೆ ಶರಣಾಗುವ ಮೊದಲು ನಕ್ಸಲೀಯರು ಕೆಲವು ಬೇಡಿಕೆಗಳನ್ನು ಇಟ್ಟಿದ್ದು, ಕಾಲಮಿತಿಯೊಳಗೆ ಈಡೇರಿಸಬೇಕೆಂದು ಕೋರಿದ್ದಾರೆ.
ಈ ಸಂಬಂಧ ನಕ್ಸಲ್ ಪುನರ್ವಸತಿ ಸಮಿತಿಗೆ ಗೌಪ್ಯಪತ್ರ ಬರೆದಿರುವ ನಕ್ಸಲೀಯರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಇವುಗಳನ್ನು ಈಡೇರಿಸಿದರೆ ಷರತ್ತುಬದ್ಧವಾಗಿ ತಾವು ಶಸ್ತ್ರಾಸ್ತ್ರಗಳನ್ನು ತೊರೆದು ಶರಣಾಗುತ್ತೇವೆ ಎಂದು ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


