ಮೈಸೂರು: ಒಂದು ಸುಳ್ಳನ್ನು ನೂರು ಬಾರಿ ಹೇಳಿ ಜನರನ್ನು ಸತ್ಯವೋ, ಸುಳ್ಳೋ ಎಂಬ ಗೊಂದಲಕ್ಕೆ ದೂಡುವ ಬಿಜೆಪಿಯವರ ಮುಖವಾಡ ಕಳಚುವಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ವಿವಿಧ ಕಾರ್ಯಕ್ರಮಗಳ ನಿಮಿತ್ತ ಬುಧವಾರ ಮೈಸೂರಿಗೆ ಆಗಮಿಸಿದ್ದ ಅವರು ಸಂಜೆ ವೇಳೆಗೆ ಜೆಎಲ್ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದರು, ಬಿಜೆಪಿ ಮುಖಂಡರಾಗಲಿ, ಕೇಂದ್ರ ಸಚಿವರಾಗಲಿ ಕಾರ್ಯಕ್ರಮ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಜನರಲ್ಲಿ ಮತ ಕೇಳುತ್ತಿಲ್ಲ. ಚುನಾವಣೆ ಬಂತೆಂದರೆ ಸಾಕು ಅವರಿಗೆ ಹಿಂದುತ್ವ, ಮುಸಲ್ಮಾನ್, ಪಾಕಿಸ್ತಾನ ನೆನಪಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಹಲವಾರು ರಾಜ್ಯಗಳು ಹಾಗೂ ಕೇಂದ್ರದಲ್ಲಿ ಕೂಡ ಬಿಜೆಪಿ ಸರ್ಕಾರವಿದೆ. ಆದರೆ, ದೇಶದ ಶೇ.35ರಷ್ಟು ಜನರು ಮಾತ್ರ ಅವರಿಗೆ ಮತ ನೀಡಿದ್ದಾರೆ. ಅವರ ವಿರುದ್ಧವಾಗಿರುವವರೇ ಹೆಚ್ಚು. ಈ ವಿಚಾರವನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಸುಳ್ಳನ್ನೇ ಪದೇ ಪದೇ ಹೇಳಿ ಜನರನ್ನು ಗೊಂದಲಕ್ಕೆ ದೂಡುತ್ತಿರುವ ಅವರ ವಿರುದ್ಧ ಬೀದಿ ನಾಟಕ ಮಾಡಿಯಾದರೂ ಜನರಿಗೆ ಸತ್ಯ ತಿಳಿಸುವ ಪರಿಸ್ಥಿತಿ ಎದುರಾಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು ಎಂದು ಕಿವಿಮಾತು ಹೇಳಿದರು.
ರಾಹುಲ್ ಗಾಂಧಿ ಅವರು ನಮಗೆ ಅಧಿಕಾರ ಸಿಗದಿದ್ದರೂ ಪರವಾಗಿಲ್ಲ. ಪಕ್ಷದ ಸಿದ್ಧಾಂತವನ್ನು ಮಾತ್ರ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾರ್ಯಕರ್ತರು ಕೂಡ ಪಕ್ಷದ ತತ್ವ, ಸಿದ್ದಾಂತಗಳೊಂದಿಗೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಡಿ.ರವಿಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮತ್ತಿತರರು ಹಾಜರಿದ್ದರು.
ದಾಖಲೆ ಸಮೇತ ಮತಗಳ್ಳತನ ಬಯಲಿಗೆಳೆದ ರಾಹುಲ್ ಗಾಂಧಿ; ಬಿಜೆಪಿ ವಿರುದ್ಧ ವಾಗ್ದಾಳಿ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


