ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿ, ನೆರೆ ಸಂತ್ರಸ್ಥರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಆದೇಶಿಸಿದರು.
ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಯವರು ಜಿಲ್ಲೆಗಳಲ್ಲಿನ ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡರು. ಈವರೆಗೂ ಪರಿಹಾರ ಪಾವತಿಸಿರುವ ಪ್ರಕರಣಗಳು ಹಾಗೂ ಪರಿಹಾರ ಪಾವತಿಗೆ ಬಾಕಿ ಇರುವ ಪ್ರಕರಣಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಇದರ ಜೊತೆಗೆ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮಥ್ರ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ ಗಳು ಅಳವಡಿಕೆಗೆ ಸಿದ್ಧವಿದೆ. ಕ್ರಸ್ಟ್ ಗೇಟ್ ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಒಳಪಡಲಿದೆ ಎಂದು ಚರ್ಚಿಸಲಾಗಿದೆ.
ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಗಳಿದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ ಎಂದು ವಿವರಿಸಲಾಯಿತು.
ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಅದನ್ನು ಶೀಘ್ರ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 4,80,256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 4,04,07 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ. 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9,087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8,608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚನೆ ನೀಡಿದರು.
ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ವಿವರಿಸಲಾಗಿದೆ.
ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡಿದ ವಿನಯ್ ಗುರೂಜಿ ನಿಂತಿದ್ದು ಯಾರ ಪರ?
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


