ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡಗೆ ಭಾರೀ ಹಿನ್ನಡೆಯಾಗಿದೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆಕೆ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಆದ್ದರಿಂದ ಪವಿತ್ರಾ ಗೌಡ ಜೈಲಿನಲ್ಲಿಯೇ ಇರಬೇಕಾಗುತ್ತದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ-1 ಪವಿತ್ರಾ ಗೌಡ, ಎ-2 ನಟ ದರ್ಶನ್ ಹಾಗೂ ಇತರರ ವಿರುದ್ಧ ಈಗಾಗಲೇ ವಿಚಾರಣಾ ನ್ಯಾಯಾಲಯ ದೋಷಾರೋಪ ಹೊರಿಸಿದೆ. ಇದನ್ನು ಆರೋಪಿಗಳು ನಿರಾಕರಿಸಿದ್ದು, ನವೆಂಬರ್ 10ರಿಂದ ವಿಚಾರಣೆ ಪ್ರಾರಂಭವಾಗಲಿದೆ.
ಇಂತಹ ಹೊತ್ತಿನಲ್ಲಿಯೇ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಮರು ಪರಿಶೀಲನೆ ಮಾಡಿ, ತನಗೆ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಕೆ ಮಾಡಿದ್ದರು. ಆದರೆ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಆಗಸ್ಟ್ 14, 2025ರಂದು ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಡಿಸೆಂಬರ್ 13, 2024ರ ಆದೇಶವನ್ನು ರದ್ದುಗೊಳಿಸಿತ್ತು. ಆದ್ದರಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ದರ್ಶನ್, ಪವಿತ್ರಾ ಗೌಡರನ್ನು ಪೊಲೀಸರು ಮತ್ತೆ ಬಂಧಿಸಿ ಜೈಲಿಗೆ ಕಳಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ಡಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠವು ಪವಿತ್ರ ಗೌಡ ಜಾಮೀನು ರದ್ದುಗೊಳಿದ ಆದೇಶದ ಕುರಿತು ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಾಲಯವು ತನ್ನ ಆದೇಶದಲ್ಲಿ ನಾವು ಆ ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ, ಮರು ಪರಿಶೀಲನೆ ಮಾಡಲು ಯಾವುದೇ ಆಧಾರ ಇಲ್ಲ. ಆದ್ದರಿಂದ, ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ ಎಂದು ಹೇಳಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು. ಈ ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳು. ಆದರೆ 6 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಪ್ರಕರಣದ ಮೊದಲ ಆರೋಪಿ ಪವಿತ್ರ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ. ಈ ಕಾರಣಕ್ಕೆ ಎಲ್ಲಾ ಆರೋಪಿಗಳು ಸೇರಿ ಸಂಚು ರೂಪಿಸಿ ಚಿತ್ರದುರ್ಗದಿಂದ ರೇಣುಕಾಸ್ವಾಮಿ ಅಪಹರಿಸಿ ಬೆಂಗಳೂರು ನಗರದ ಪಟ್ಣಣಗೆರೆ ಶೆಡ್ಗೆ ಕರೆತಂದು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಪವಿತ್ರಗೌಡ ಹೊಡೆದು ಹಲ್ಲೆ ಮಾಡಿದ್ದಾರೆ. 2ನೇ ಆರೋಪಿ ದರ್ಶನ್ ಆತನ ಪ್ಯಾಂಟ್ ಬಿಚ್ಚಿ ಹಲ್ಲೆ ನಡೆಸಿದ್ದಾರೆ. ಉಳಿದ ಕೆಲ ಆರೋಪಿಗಳಿಗೆ ಹಣದ ಆಸೆ ತೋರಿಸಿ ಸಂಚಿನಲ್ಲಿ ಭಾಗಿಯಾಗುವಂತೆ ಮಾಡಲಾಗಿದೆ.
ಹತ್ಯೆ ಬಳಿಕ ಸಾಕ್ಷ್ಯನಾಶ, ಕೃತ್ಯದ ವೇಳೆ ಮೊಬೈಲ್ನಲ್ಲಿ ಸೆರೆಹಿಡಿದಿದ್ದ ಫೋಟೊವನ್ನು ಡಿಲೀಟ್ ಮಾಡಲಾಗಿದೆ ಎಂಬುದು ಸೇರಿದಂತೆ 17 ಜನರ ವಿರುದ್ಧ ಹಲವು ದೋಷಾರೋಪಗಳಿವೆ. ಆರೋಪಿಗಳು ನಮಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ನಮ್ಮ ಮೇಲಿನ ಆರೋಪಗಳು ಸುಳ್ಳಾಗಿವೆ. ಪ್ರಕರಣದ ವಿಚಾರಣೆ ಎದುರಿಸಲು ಸಿದ್ದ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದ್ದರಿಂದ ಕೋರ್ಟ್ ವಿಚಾರಣೆಯನ್ನು ನವೆಂಬರ್ 10ಕ್ಕೆ ನಿಗದಿಪಡಿಸಿದೆ.
ಚಿಕ್ಕಮಗಳಿದ್ದು ಅವಳನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ಜಾಮೀನು ರದ್ದುಗೊಳಿಸಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಬೇಕು ಮತ್ತು ಜಾಮೀನು ನೀಡಬೇಕು ಎಂದು ಅರ್ಜಿಯಲ್ಲಿ ಪವಿತ್ರಾ ಗೌಡ ಮನವಿ ಮಾಡಿದ್ದರು. ಆದರೆ ಸುಪ್ರೀಂಕೋರ್ಟ್ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಮುಂದೆ ಪವಿತ್ರಾ ಗೌಡ ಜಾಮೀನು ಪಡೆಯಲು ಮೊದಲು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


