ದಕ್ಷಿಣ ಕನ್ನಡ ಜಿಲ್ಲೆಯ ಬಹು ವರ್ಷಗಳ ಬೇಡಿಕೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಸರ್ಕಾರದ ಆದೇಶ ಸಹ ಪ್ರಕಟವಾಗಿದೆ. ಕರಾವಳಿ ಕರ್ನಾಟಕ ಭಾಗದ ಬಹು ನಿರೀಕ್ಷಿತ ಯೋಜನೆಗೆ ಸ್ಥಳವನ್ನು ಅಂತಿಮಗೊಳಿಸುವ ಕಾರ್ಯ ಸಹ ನಡೆಯುತ್ತಿದೆ.
ಹೌದು ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜಯ ಸ್ಥಾಪಿಸುವ ಕುರಿತು ಆದೇಶವನ್ನು ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಪ್ರಭಾಕರ ಸರ್ಕಾರದ ಅಧೀನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.
ಸರ್ಕಾರದ ಆದೇಶ ದಿನಾಂಕ 04.12.2025ರ ಪ್ರಕಾರ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-138 (iv)ರಲ್ಲಿ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.
ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂಬ ಘೋಷಣೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅನುಷ್ಟಾನಗೊಳಿಸಲು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-138 (iv) ಅನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ದಿನಾಂಕ 27.11.2025ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ ಎಂದು ತಿಳಿಸಿದೆ. ಅಲ್ಲದೇ ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು ಆರ್ಥಿಕ ಇಲಾಖೆಯು ಸಹಮತಿಸಿದೆ ಹಾಗೂ 2025-26ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 138(4) ಅನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸುವಂತೆಯೂ ತಿಳಿಸಿದೆ.
ಬಹು ವರ್ಷಗಳ ಬೇಡಿಕೆ: ಕರ್ನಾಟದಲ್ಲಿ ಶೈಕ್ಷಣಿಕವಾಗಿ ಬಹಳ ಅಭಿವೃದ್ಧಿ ಹೊಂದಿರುವ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಸಹ ಒಂದು. ದೇಶ ಮತ್ತು ವಿದೇಶದ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯಲು ಆಗಮಿಸುತ್ತಾರೆ. ಆದರೆ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲಿಯ ತನಕ ಸ್ಥಾಪನೆಯಾಗಿರಲಿಲ್ಲ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ‘ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದರೂ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರ ಇರಲೇ ಇಲ್ಲ. ಆ ಪ್ರದೇಶಕ್ಕೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆನ್ನುವ ಕೂಗು ಹಲವಾರು ವರ್ಷಗಳಿಂದ ಕೇಳಿಬಂದಿದ್ದರೂ ಇದುವರೆಗೂ ಅದು ಸಾಧ್ಯವಾಗಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಜಿಲ್ಲೆಯ ಜನರ ಹಾಗೂ ಸಾರ್ವಜನಿಕರ ಆ ಕನಸು ಕೈಗೂಡುತ್ತಿದೆ. ಅದನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕರಾವಳಿಯ ಉಸ್ತುವಾರಿ ಸಚಿವನಾಗಿ ನಾನು ಮಾಡಿದ ಪ್ರಾಮಾಣಿಕ ಪ್ರಯತ್ನ ಫಲ ನೀಡಿದೆ’ ಎಂದು ಹೇಳಿದ್ದಾರೆ.
‘2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ – 138 (iv) ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುತ್ತಿದ್ದು, ಯೋಜನೆ ಅನುಷ್ಟಾನಗೊಳಿಸಲು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ’
‘ವಿದ್ಯಾರ್ಥಿ ಯುವಜನರನ್ನು ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಆರ್ಥಿಕವಾಗಿ ಪ್ರಬಲರನ್ನಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ರಾಜಕಾರಣ ಮಾಡಬೇಕೇ ವಿನಃ ಜಾತಿ-ಧರ್ಮದ ಹೆಸರಲ್ಲಿ ಪೆನ್ನು-ಪುಸ್ತಕ ಹಿಡಿಯುವ ಕೈಗೆ ಚಾಕು-ಚೂರಿ-ತ್ರಿಶೂಲ ಕೊಟ್ಟು ಕೇಸರಿ ಸಾಲು ಹಾಕಿ ಬೀದಿ ಹೆಣಗಳನ್ನಾಗಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೊಳಕು ರಾಜಕಾರಣ ಮಾಡಬಾರದು’
‘ದಕ್ಷಿಣ ಕನ್ನಡದ ಎಲ್ಲ ಸಮುದಾಯಗಳ ವಿದ್ಯಾರ್ಥಿ ಯುವಜನರು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವತ್ತ ಹೆಜ್ಜೆ ಹಾಕಬೇಕು. ಆ ನಿಟ್ಟಿನಲ್ಲಿ ಬೇಕಾದ ಎಲ್ಲ ಸಹಕಾರವನ್ನು ನೀಡಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಈ ಮೂಲಕ ತಿಳಿಸುತ್ತಿದ್ದೇನೆ’ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


