ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ಸರ್ಕಾರ ಏಪ್ರಿಲ್ನಲ್ಲಿ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು.
ಗ್ಯಾರಂಟಿ ಯೋಜನೆ ಹೆಸರೇಳಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗ ಎಲ್ಲದಕ್ಕೂ ಹಣ ಹೊಂದಿಸಲು ಆಗದೇ ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ-ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಈ ಮಧ್ಯೆ ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಾರಕಿಹೊಳಿ ನಮ್ಮ ಊಟ ನಮ್ಮ ಮೀಟಿಂಗ್ ಎಂದು ಹೇಳಿದ್ದಾರೆ. ಇತ್ತ ಪರಮೇಶ್ವರ್, ರಾಜಣ್ಣ, ಸತೀಶ್ ಜಾರಕಿಹೊಳಿ ಅವರು ತಮ್ಮ ಸರ್ಕಾರದ ವಿರುದ್ಧವೇ ಗುಡುಗಿದ್ದಾರೆ. ಅಲ್ಲದೇ ಇದು ದಲಿತ ವಿರೋಧಿ ಸರ್ಕಾರ ಎಂದಿದ್ದಾರೆ. ಸೋಮವಾರ ನಡೆಯುವ ಶಾಸಕಾಂಗ ಸಭೆಯ ನಂತರ ಕಾಂಗ್ರೆಸ್ ಬಣ್ಣ ಬಯಲಾಗಲಿದೆ ಎಂದು ಭವಿಷ್ಯ ನುಡಿದರು.
ಇನ್ನು ನಮ್ಮ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ. ರಾಜ್ಯಾಧ್ಯಕ್ಷರಿಗೆ ಮಾಜಿ ಸಚಿವರು, ಮಾಜಿ ಶಾಸಕರು ಎಲ್ಲಾ ಹಂತದಲ್ಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಂಘಟನೆಗಾಗಿ ಸಭೆ ಕರೆದಿದ್ದಾರೆ ಎಂದು ಮಾಹಿತಿ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


