ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯು ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.
ಎಸ್.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅವರ ಪಿತ್ರಾರ್ಜಿತ ಆಸ್ತಿಯ ಕೆಫೆ ಕಾಫಿ ಡೇ ಪಕ್ಕದಲ್ಲಿ ನಡೆಯಲಿದೆ.
ಸಮೀಪದ ಜಮೀನಿನಲ್ಲಿ ನಡೆಯಲಿರುವ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕ ಉದಯ್ ಸೇರಿದಂತೆ ಹಲವಾರು ಮಂದಿ ಸ್ಥಳಕ್ಕೆ ತೆರಳಿ ಪೂರ್ವ ಸಿದ್ಧತೆಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಜಿಲ್ಲಾಡಳಿತ ಕೂಡ ಅಗತ್ಯ ಸಿದ್ಧತೆಗಳಿಗೆ ತಯಾರಿ ಆರಂಭಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ತೆರಳಿದ್ದು, ವಿಶೇಷ ಅತಿಥಿಗಳ ಆಗಮನ ಹಾಗೂ ಆಸನ ವ್ಯವಸ್ಥೆ, ಪಾರ್ಕಿಂಗ್, ಭದ್ರತೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ನಾಳೆ ಬೆಳಿಗ್ಗೆ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಮದ್ದೂರಿನವರೆಗೂ ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಲಿದೆ. ನಂತರ ಸೋಮನಹಳ್ಳಿಯಲ್ಲಿ ಸಂಜೆ ೪ ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ನಿರ್ಧರಿಸಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


