ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕಾನೂನುಬದ್ಧವಾಗಿ ನಾವು ಮಾಡಿರುವ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ಹೊಸ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪಂಚಮಸಾಲಿ ಸಮಾಜ ಲಿಂಗಾಯತರಲ್ಲಿಯೇ ಅತ್ಯಂತ ದೊಡ್ಡ ಸಮಾಜ. ರೈತಾಪಿ ಕುಟುಂಬ ಹೊಂದಿರುವ ಸಮಾಜ, ನಾಡಿಗೆ ಅನ್ನಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಮಾಜ, ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ ಈ ಸಮಾಜಕ್ಕೆ ಸೇರಿದವರಾಗಿದ್ದರು. ಸಂಗೊಳ್ಳಿ ರಾಯಣ್ಣ ಹಾಲು ಮತದ ಸಮಾಜಕ್ಕೆ ಸೇರಿದವರಾಗಿದ್ದರೂ ಕಿತ್ತೂರು ಚನ್ನಮ್ಮಳ ಬಲಗೈ ಬಂಟ ಆಗಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು. 2011-12 ರಲ್ಲಿ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಕೆಲಸವನ್ನು ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ಬಿಜೆಪಿ ಸರ್ಕಾರ ಮಾಡಿದ್ದು ಗಮನಾರ್ಹ ಎಂದು ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಇಲ್ಲ ಎನ್ನುವುದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಅದರ ಅನುಗುಣವಾಗಿ ರಾಜ್ಯದಲ್ಲಿ ಅಲ್ಪ ಸಂಖ್ಯಾತರಿಗೆ ಪ್ರವರ್ಗ 2ಬಿಯಲ್ಲಿ ನೀಡಿದ್ದ ಶೇ 4% ರಷ್ಟು ಮೀಸಲಾತಿಯನ್ನು ನಾವು ಸಂವಿಧಾನ ಬದ್ದವಾಗಿ, ಕಾನೂನಾತ್ಮಕವಾಗಿ ಪ್ರವರ್ಗ 3ಸಿ ಮತ್ತು 3ಡಿ ಮಾಡಿ ವೀರಶೈವ ಲಿಂಗಾಯತ ಮತ್ತು ವಕ್ಕಲಿಗ ಸಮುದಾಯಗಳಿಗೆ ಹಂಚಿಕೆ ಮಾಡಿದ್ದೇವೆ. ಆಂಧ್ರದ ವಿಚಾರದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅನ್ನುವುದನ್ನು ಆಂಧ್ರಪ್ರದೇಶ ಹೈಕೋರ್ಟ್ ಕೂಡ ಎತ್ತಿ ಹಿಡಿದಿದೆ. ಈಗ ಪಶ್ಚಿಮ ಬಂಗಾಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಧರ್ಮಾಧಾರಿತ ಮೀಸಲಾತಿ ನೀಡಲು ಅವಕಾಶ ಇಲ್ಲ ಅಂತ ಬಹಳ ಸ್ಪಷ್ಟವಾಗಿ ಹೇಳಿದೆ. ಹೀಗಿದ್ದರೂ ಕೂಡ ರಾಜ್ಯ ಸರ್ಕಾರ ನಾವು ಮಾಡಿರುವ ತೀರ್ಮಾನಕ್ಕೆ ಬೆಂಬಲ ಕೊಡಲು ನಿರಾಕರಿಸುತ್ತಿದೆ ಎಂದು ತಿಳಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


