ಜನೌಷಧಿ ಕೇಂದ್ರದ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ರದ್ದುಗೊಳಿಸಿದೆ.
ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನೆ ಮಾಡಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ನ ಧಾರವಾಡ ಪೀಠ ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.
ಜನೌಷಧಿ ಕೇಂದ್ರದಲ್ಲಿ ಕಡಿಮೆ ಬೆಲೆಗೆ ಔಷಧಿಗಳನ್ನು ನೀಡಲಾಗುತ್ತಿದೆ. ಬಡವರಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳು ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಸಮಸ್ಯೆ ಏನು? ಎಂದು ಕೋರ್ಟ್ ಪ್ರಶ್ನೆ ಮಾಡಿ, ಸರ್ಕಾರದ ಆದೇಶ ರದ್ದು ಮಾಡಿದೆ.
ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಸರ್ಕಾರಿ ವಕೀಲರನ್ನು ಜನೌಷಧಿ ಕೇಂದ್ರದ ಕುರಿತು ಯಾವುದಾದರೂ ದೂರು ಬಂದಿದೆಯೇ?. 120 ಚದರ ಅಡಿ ಜಾಗದಲ್ಲಿ ಜನೌಷಧಿ ಕೇಂದ್ರ ಸ್ಥಾಪನೆ ಮಾಡಿ ಬಡವರಿಗೆ ಕಡಿಮೆ ಹಣದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ? ಎಂದು ಪ್ರಶ್ನೆ ಮಾಡಿತು.
ಈ ಕುರಿತ ವಿಚಾರ ಕೋರ್ಟ್ ತನಕ ಬರಬಾರದಿತ್ತು. ಜನೌಷಧಿ ಕೇಂದ್ರ ಇಡಲು ಅವಕಾಶ ಇಲ್ಲ ಎಂದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಅರ್ಥ ಎಂದು ಹೇಳಿದ ಕೋರ್ಟ್ ಸರ್ಕಾರದ ಆದೇಶವನ್ನು ರದ್ದುಗೊಳಿಸಿತು.
ಸರ್ಕಾರ ಹೇಳಿದ್ದೇನು?: ಕರ್ನಾಟಕ ಸರ್ಕಾರ ಮೇ ತಿಂಗಳಿನಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಕುರಿತು ಆದೇಶವನ್ನು ಹೊರಡಿಸಿತ್ತು. ಈ ಕುರಿತು ಮಾತನಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ” ಎಂದು ಹೇಳಿದ್ದರು.
“ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿ ಎಂದು ಹೇಳಿಲ್ಲ. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ” ಎಂದು ತಿಳಿಸಿದ್ದರು.
“ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ ಮತ್ತು ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಜನೌಷಧಿ ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಆದರೆ, ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.
“ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದರು.
“ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳಲ್ಲಿ ಔಷಧಗಳ ಕೊರತೆಯಿಲ್ಲ. ಕೆಲವು ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನು BPPI ನಿಂದ ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಗಳನ್ನು ಪಡೆಯಬೇಕು. ವೈದ್ಯರು ಚೀಟಿ ಕೊಟ್ಟು ಹೊರಗಡೆಯಿಂದ ಔಷಧಗಳನ್ನು ತರಿಸುವ ಪದ್ಧತಿ ನಿಲ್ಲಬೇಕು” ಎಂದು ಹೇಳಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


