ಬೆಂಗಳೂರು: ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದರು.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಪುಢಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾನು ಹೆದರುವ ವ್ಯಕ್ತಿ ಅಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ. ನನ್ನಲ್ಲಿರುವ ದಾಖಲೆಗಳನ್ನು ಬಿಚ್ಚಿಟ್ಟರೆ ಜನರೇ ಇವರನ್ನು ಓಡಿಸುತ್ತಾರೆ ಎಂದು ಕೇಂದ್ರ ಸಚಿವರು ಎಚ್ಚರಿಕೆ ನೀಡಿದರು.
ಟನ್ ಗಟ್ಟಲೆ ದಾಖಲೆ ಇದೆ ಅಂತ ಹೇಳಿದ್ದೆ, ಅದೇನು ಸುಳ್ಳಲ್ಲ. ಅಕ್ಷರಶಃ ಸತ್ಯ. ಹಿಂದೆ ಅಧಿಕಾರದಲ್ಲಿದ್ದಾಗ ನನ್ನ ಧ್ವನಿ ಅಡಗಿಸೋ ಕೆಲಸ ಮಾಡಿದ್ದರು. ನನ್ನ ತೊಡವಿಕೊಂಡರೆ ಅವರಿಗೆ ಕಷ್ಟ. ನಾನು ಯಾವುದೇ ಕಾನೂನು ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ನ್ಯಾಯ, ಕೋರ್ಟ್ ಇದೆ ಎಂದು ಹೋರಾಟ ಮಾಡುತ್ತಿದ್ದೇನೆ. ನನ್ನಲ್ಲಿ ಅಧಿಕಾರ ಇದ್ದಾಗಲೂ ನಾನು ನನ್ನ ಕೆಲಸ ಮಾಡಿಕೊಳ್ಳಲಿಲ್ಲ. ಈಗ ಕೇಂದ್ರ ಸಚಿವನಾಗಿದ್ದಾಗಲೂ ಕಾಂಗ್ರೆಸ್ ನವರು ನನಗೆ ಕಿರುಕುಳ ನೀಡುತ್ತಿದ್ದಾರೆ. ಅದಕ್ಕೆ ಹೆದರಲ್ಲ ನಾನು ಎಂದು ಆಕ್ರೋಶ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


