ದಿಂಡಿಗಲ್: ಇಲ್ಲಿನ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ ೭ ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ೨೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದುರಂತದಲ್ಲಿ ಮೃತಪಟ್ಟವರನ್ನು ಸುರುಳಿ (೫೦ ವರ್ಷ), ಸುಬ್ಬುಲಕ್ಷ್ಮೀ (೪೫ ವರ್ಷ), ಮರಿಯಮ್ಮಾಳ್ (೫೦ ವರ್ಷ), ಮಣಿಮುರುಗನ್ (೨೮ ವರ್ಷ), ರಾಜಶೇಖರ್ (೩೫ ವರ್ಷ) ಎಂದು ಗುರುತಿಸಲಾಗಿದೆ. ಇವರು ಮಾತ್ರವಲ್ಲದೆ ಒಂದು ಹೆಣ್ಣು ಮಗು ಕೂಡ ಮೃತಪಟ್ಟಿದೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ವೆಂಟಿಲೇಟರ್ನಲ್ಲಿ ಇಡಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು. ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಹತ್ತಕ್ಕೂ ಹೆಚ್ಚು ಆಂಬ್ಯುಲೆನ್ಸ್ಗಳು ಕಾರ್ಯ ನಿರ್ವಹಿಸಿದವು.ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಪೂಂಗೊಡಿ ಹಾಗೂ ಪಳನಿ ಶಾಸಕ ಐ.ಬಿ.ಸೆಂಥಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲ ಮಹಡಿಯಲ್ಲಿನ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಅದು ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಅಗ್ನಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಆವರಿಸಿದ ದಟ್ಟವಾದ ಹೊಗೆಯಿಂದ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ರಿಸೆಪ್ಷನ್ ಹಾಲ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಸರಿಸುಮಾರು ೫೦ ಆಂಬ್ಯುಲೆನ್ಸ್ಗಳನ್ನು ಬಳಸಿಕೊಂಡು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ, ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕನಿಷ್ಠ ೩೦ ರೋಗಿಗಳನ್ನು ಚಿಕಿತ್ಸೆಗಾಗಿ ದಿಂಡುಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟರು. ಕೊನೆಗೂ ಬೆಂಕಿ ನಂದಿಸುವಲ್ಲಿ ಅವರು ಯಶಸ್ವಿಯಾಗಿದ್ದು, ಆಸ್ಪತ್ರೆಯ ಒಳಗೆ ಸಿಲುಕಿರುವವರನ್ನು ಪತ್ತೆಹಚ್ಚಿ ರಕ್ಷಿಸುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ಕನಿಷ್ಠ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾದರು ಮತ್ತು ಇತರ ಮೂವರು ಉಸಿರುಗಟ್ಟಿ ಸತ್ತರು. ಆಸ್ಪತ್ರೆಯಲ್ಲಿ ಹರಡಿದ ಬೆಂಕಿಯಲ್ಲಿ ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


