ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 8ರ ಸೋಮವಾರದಿಂದ 19ರ ತನಕ ಚಳಿಗಾಲದ ಅಧಿವೇಶನ ನಡೆಯಲಿದೆ. ಆದರೆ ಶನಿವಾರ ಮತ್ತು ಭಾನುವಾರದ ಕಾರಣ ಇಂದು, ನಾಳೆ ಅಧಿವೇಶನ ಇರುವುದಿಲ್ಲ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಕರ್ನಾಟಕ ಕಾಂಗ್ರೆಸ್ನ ಅಧಿಕಾರ ಹಂಚಿಕೆ ಚರ್ಚೆಯ ನಡುವೆ ಈ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ಧ್ವನಿ ಎತ್ತುತ್ತಿದೆ. ಈ ಕುರಿತು ದೆಹಲಿಯಲ್ಲಿ ಭಾನುವಾರ ರಾಷ್ಟ್ರಮಟ್ಟದ ಬೃಹತ್ ಹೋರಾಟವನ್ನು ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿರುವ ಕರ್ನಾಟಕದಿಂದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ವೋಟ್ ಚೋರಿ ವಿರುದ್ದ ಕರ್ನಾಟಕ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನ ನಡೆಸಿತ್ತು. 1.12 ಕೋಟಿ ಜನರು ಸಹಿ ಹಾಕಿದ್ದರು. ದೆಹಲಿಯಲ್ಲಿ ಭಾನುವಾರ ಈ ವೋಟ್ ಚೋರಿ ಕುರಿತು ರಾಷ್ಟ್ರಮಟ್ಟದ ಹೋರಾಟ ನಡೆಸಲಾಗುತ್ತದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಸಿದ್ದರಾಮಯ್ಯಗೂ ಮೊದಲು ಡಿಕೆಶಿ ದೆಹಲಿಗೆ; ವೋಟ್ ಚೋರಿ ವಿರುದ್ಧದ ಹೋರಾಟ ಒಂದು ಕಡೆಯಾದರೆ ಕರ್ನಾಟಕ ಕಾಂಗ್ರೆಸ್ನ ಅಧಿಕಾರ ಹಂಚಿಕೆ ಬಿಕ್ಕಟ್ಟು ಇನ್ನೊಂದು ಕಡೆ. ಬೆಳಗಾವಿ ಅಧಿವೇಶನದ ಸಮಯದಲ್ಲಿಯೇ ಎರಡು ಡಿನ್ನರ್ ಮೀಟಿಂಗ್, ಒಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದೆ.
ಆದ್ದರಿಂದ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯಗೂ ಮೊದಲೇ ದೆಹಲಿಗೆ ಹೋಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಡಿ.ಕೆ.ಶಿವಕುಮಾರ್ ಬೆಂಬಲಿಗ ಮಂಡ್ಯ, ರಾಮನಗರ ಭಾಗದ ಶಾಸಕರು ಸಹ ಶನಿವಾರವೇ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಡಿ.ಕೆ.ಶಿವಕುಮಾರ್, “ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು” ಎಂದು ಹೇಳಿದ್ದರು.
“ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ” ಎಂದು ತಿಳಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ” ಎಂದು ಹೇಳಿದ್ದರು.
ಆದರೆ ಇದು ಕೇವಲ ಹೇಳಿಕೆಗಳಿಗೆ ಸೀಮಿತವಾಗಿದೆ. ಬೆಳಗಾವಿ ಅಧಿವೇಶನದ ಮೊದಲ ದಿನವೇ ಸಿದ್ದರಾಮಯ್ಯ ಪುತ್ರ, ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದರು.
ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಸಂಕ್ರಾಂತಿ ತನಕ ಕಾದು ನೋಡಿ ಎಂದು ಹೇಳುವ ಮೂಲಕ ಅಧಿಕಾರ ಹಂಚಿಕೆ ಕಗ್ಗಂಟು ಇನ್ನೂ ಸಹ ಮುಂದುವರೆದಿದೆ ಎಂಬ ಸೂಚನೆ ನೀಡಿದ್ದರು. ಆದ್ದರಿಂದ ಈಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಹೈಕಮಾಂಡ್ ನಾಯಕರು ಉಭಯ ನಾಯಕರನ್ನು ಒಟ್ಟಿಗೆ ಕೂರಿಸಿ ಅಧಿಕಾರ ಹಂಚಿಕೆ ಕಗ್ಗಂಟು ಬಗೆಹರಿಸುತ್ತಾರೆಯೇ? ಇಲ್ಲವೇ ದೆಹಲಿಯಿಂದ ವಾಪಸ್ ಆದ ಮೇಲೆಯೂ ಈ ಚರ್ಚೆಗೆ ಹೀಗೆಯೇ ಇರಲಿದೆಯೇ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


