ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಈಚೆಗೆ ನಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು.
ಘಟನೆ ನಡೆದ ದಿನ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಆ ದಿನ ರಾತ್ರಿ ಹಲವು ನಾಟಕೀಯ ಬೆಳವಣಿಗೆ ನಡೆದವು. ಮಾರನೇ ದಿನ ಕೋರ್ಟ್ನಲ್ಲಿ ಬಿಜೆಪಿ ನಾಯಕನಿಗೆ ಜಾಮೀನು ಸಿಕ್ಕಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಂದರ್ಶನವೊಂದರಲ್ಲಿ ಸಿ.ಟಿ.ರವಿ, ಅಕ್ಕ ನಾನು ಹೃದಯದಿಂದ ಕೆಟ್ಟವನಲ್ಲ ಎಂದು ತಿಳಿಸಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


