ಬೆಂಗಳೂರು: ಕೋಮು-ದ್ವೇಷದ ಭಾಷಣಗಳಿಂದ ನಾಗರಿಕ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮವನ್ನು ತಡೆಗಟ್ಟಲು ಶೀಘ್ರದಲ್ಲೇ ದ್ವೇಷ ಭಾಷಣ ನಿಯಂತ್ರಣ ಕಾನೂನು ಜಾರಿ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ಗೆ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕಿಶೋರ್ ಪ್ರಶ್ನೆಗೆ ಉತ್ತರಿಸಿದ ಅವರು, ದ್ವೇಷ ಭಾಷಣದಿಂದ ಕೆಲವು ಸಂದರ್ಭಗಳಲ್ಲಿ ಎಂತಹ ಅನಾಹುತಗಳು ಉಂಟಾಗಿದೆ ಎಂಬುದು ಅನೇಕ ನಿದರ್ಶನಗಳಿಂದ ಸಾಬೀತಾಗಿದೆ. ಹೀಗಾಗಿ ದ್ವೇಷ ಭಾಷಣ ನಿಯಂತ್ರಣಕ್ಕೆ ಕಡಿವಾಣ ಹಾಕಲು ಈ ಕಾನೂನು ಅಗತ್ಯವಾಗಿದೆ ಎಂದು ಸಮರ್ಥನೆ ಮಾಡಿಕೊಂಡರು.
ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳು, ಪ್ರಚೋದನಕಾರಿ ಬರಹಗಳು, ಸುಳ್ಳು ಸುದ್ದಿ ಹರಡುವವರು, ಸಮಾಜದಲ್ಲಿ ವಾತಾವರಣ ಹಾಳುಗೆಡುವವರ ಮೇಲೆ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ. ಯಾರೊಬ್ಬರು ಅನಗತ್ಯವಾಗಿ ಪ್ರಚೋದನಕ್ಕೆ ಒಳಗಾಗಬಾರದೆಂದು ಮನವಿ ಮಾಡಿದರು.
ಮಂಗಳೂರು, ಉಡುಪಿ ಮತ್ತು ಶಿವಮೊಗ್ಗದಲ್ಲಿ ಇತ್ತೀಚೆಗೆ ಕೆಲವು ಅಹಿತಕರ ಘಟನೆಗಳು ಮರುಕಳುಹಿಸಿದ ಪರಿಣಾಮ ನಕ್ಸಲ್ ನಿಗ್ರಹದಳದ ಮಾದರಿಯಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಈ ಪಡೆಯು ಕೋಮು ಸೌಹಾರ್ದ ಹಾಳು ಮಾಡುವವರ ಮೇಲೆ ವಿಶೇಷ ನಿಗಾವಹಿಸಿ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಈ ಪಡೆಯು 11.06.2025ರಲ್ಲಿ ಪ್ರಾರಂಭವಾಗಿದೆ. ಗಸ್ತು ತಿರುಗುವುದು, ಗುಪ್ತಚರ ವಿಭಾಗ ನೀಡುವ ಮಾಹಿತಿ ಮೇಲೆ ನಿಗಾ ಇಡುವುದು, ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾವಹಿಸುವುದು ಸೇರಿದಂತೆ ಕಾನೂನು ಕ್ರಮ ಜರುಗಿಸಲು ಇವರಿಗಾಗಿ ವಿಶೇಷ ತರಬೇತಿಯನ್ನು ನೀಡುತ್ತೇವೆ. ಸಮಾಜದಲ್ಲಿ ಶಾಂತಿ ಮೂಡಿಸಲು ಈ ಪಡೆಯ ಉದ್ದೇಶವೇ ಹೊರತು ಅನ್ಯ ಉದ್ದೇಶಕ್ಕಾಗಿ ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕರಾವಳಿ ಹಾಗೂ ಶಿವಮೊಗ್ಗ ಭಾಗಗಳಲ್ಲಿ ಅಹಿತಕರ ಘಟನೆಗಳು ಮರುಕಳುಹಿಸಿದ್ದರಿಂದ ಈ ಪಡೆಗಳನ್ನು ರಚಿಸುವ ಅನಿವಾರ್ಯವಾಗಿತ್ತು. ನಾನು ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದ ವೇಳೆ ಮಂಗಳೂರಿಗೆ ಭೇಟಿ ಕೊಟ್ಟಿದ್ದೆ. ಅಲ್ಲಿ ಉದ್ಯಮಿಗಳು, ಕೈಗಾರಿಕೋದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿತ್ತು.
ಆ ವೇಳೆ ಅವರು ರಾಜ್ಯದಲ್ಲಿ ಕರಾವಳಿ ತೀರಪ್ರದೇಶವು ನೆಮದಿಯ ವಾತಾವರಣವಿರಬೇಕೆಂದು ಮನವಿ ಮಾಡಿದ್ದರು. ಅದರಂತೆ ಇಲ್ಲಿ ಕೆಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಇತ್ತೀಚೆಗೆ 10,200 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ನಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಯಾರಾದರೂ ಇಲ್ಲಿಗೆ ಬಂಡವಾಳ ಹೂಡಲು ಬರುತ್ತಿದ್ದರೇ? ಎಂದು ಪರಮೇಶ್ವರ್ ಪ್ರಶ್ನೆ ಮಾಡಿದರು.
ಕಾನೂನು ಸುವ್ಯವಸ್ಥೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ ಸ್ಥಾನದಲ್ಲಿದೆ. ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಪರಿಸ್ಥಿತಿ ಉತ್ತಮ ಸ್ಥಿತಿಯಲ್ಲಿದೆ. ಯಾವ ಸರ್ಕಾರದಲ್ಲಿ ಎಷ್ಟೆಷ್ಟು ಘಟನೆಗಳು ನಡೆದಿವೆ ಎಂಬುದನ್ನು ದಾಖಲೆಗಳ ಸಮೇತ ವಿವರ ನೀಡುತ್ತೇನೆ ಎಂದು ಹೇಳಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು.!
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


