ಬೆಂಗಳೂರು: ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.
ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ. ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ ಎಂದರು.
ಬಹಳ ಹಿಂದೆಯೇ ಬಸವಾದಿ ಶರಣರು ಮೌಡ್ಯ , ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಗೂ ಮೌಢ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಡ್ಯವನ್ನು ಬಿತ್ತುತ್ತಾರೆ ಎಂದರು.
ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಡ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಡ್ಯ ಮತ್ತು ಮೌಡ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.
ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಸಿದರು.
ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರೂ ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿ ಹೊಂದಿದ್ದರು. ಇದಕ್ಕೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ವಿವರಿಸಿದರು.
52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈಗ ಕೊಡಲು ಸಿದ್ದವಿದೆ ಎಂದು ಘೋಷಿಸಿದರು.
10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ:ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


