ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ರಾಜ್ಯದಲ್ಲಿ ನಡೆಯುತ್ತಿದೆ. ಅಕ್ಟೋಬರ್ 18ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಸಮೀಕ್ಷೆಯ ಕರ್ತವ್ಯದ ವೇಳೆಯಲ್ಲಿ ಮರಣ ಹೊಂದಿದ ಸರ್ಕಾರಿ ನೌಕರರ ಅವಲಂಬಿತ ಕುಟುಂಬಗಳಿಗೆ ಪರಿಹಾರ ಧನ ಬಿಡುಗಡೆ ಮಾಡುವ ಕುರಿತು ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಈಗ ಪರಿಹಾರ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಕೆ.ಎ.ದಯಾನಂದ, ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದ ಕರ್ತವ್ಯದ ವೇಳೆಯಲ್ಲಿ ಮರಣ ಹೊಂದಿದ ಸರ್ಕಾರಿ ನೌಕರರ ಅವಲಂಬಿತ ಕುಟುಂಬಗಳಿಗೆ ಪರಿಹಾರ ಧನ ಬಿಡುಗಡೆ ಮಾಡುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲು ಆದೇಶಿಸಲಾಗಿರುತ್ತದೆ. ಅದರಂತೆ, ದಿನಾಂಕ:22.09.2025 ರಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಕೈಗೊಳ್ಳಲಾಗಿರುತ್ತದೆ.
ಜಿಲ್ಲಾಧಿಕಾರಿಗಳು, ಬಾಗಲಕೋಟೆ ಜಿಲ್ಲೆ ಇವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷಾದಾರರಾಗಿ ಪಾಲ್ಗೊಂಡಿದ್ದ ಶ್ರೀಮತಿ ದಾನಮ್ಮ ಐ ನಂದರಗಿ, ಸಹ ಶಿಕ್ಷಕಿ ಇವರು ಸಮೀಕ್ಷಾ ಕಾರ್ಯ ಮುಗಿಸಿಕೊಂಡು ಕರ್ತವ್ಯದಿಂದ ಹಿಂದಿರುಗುವಾಗ ದಿನಾಂಕ:03.10.2025 ರಂದು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಸದರಿ ನೌಕರರ ಅವಲಂಬಿತ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಿ ಕೋರಿರುತ್ತಾರೆ.
ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷಾದಾರರಾಗಿ ಪಾಲ್ಗೊಂಡಿದ್ದ ಶ್ರೀ ವೈ.ವಿ ರಾಮಕೃಷ್ಣಪ್ಪ, ಸಹ ಶಿಕ್ಷಕರು ಇವರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ದಿನಾಂಕ:28.09.2025 ರಂದು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಮಾನ್ಯ ಮುಖ್ಯಮಂತ್ರಿಗಳು ಪತ್ರಿಕಾ ಗೋಷ್ಟಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕರ್ತವ್ಯದ ವೇಳೆಯಲ್ಲಿ ಮೃತರಾದ ಸರ್ಕಾರಿ ನೌಕರರಿಗೆ ತಲಾ ರೂ.20.00 ಲಕ್ಷ ಪರಿಹಾರ ಧನ ನೀಡುವುದಾಗಿ ಘೋಷಿಸಿರುತ್ತಾರೆ. ಅದರಂತೆ, ಸಭೆಯಲ್ಲಿ ಕರ್ತವ್ಯದ ವೇಳೆಯಲ್ಲಿ ಮೃತರಾದ ಇಬ್ಬರು ಸರ್ಕಾರಿ ನೌಕರರ ಅವಲಂಬಿತ ಕುಟುಂಬಗಳಿಗೆ ತಲಾ ರೂ.20.00 ಲಕ್ಷ ದಂತೆ ಪರಿಹಾರ ಧನ ನೀಡಲು ತೀರ್ಮಾನಿಸಲಾಗಿರುತ್ತದೆ. ಅದರಂತೆ ಒಟ್ಟು ರೂ.40 ಲಕ್ಷಗಳನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗಳಿಗೆ ಬಿಡುಗಡೆ ಮಾಡಬೇಕಾಗಿರುತ್ತದೆ.
ಆದೇಶ: ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಪಾಲ್ಗೊಂಡು ಕರ್ತವ್ಯದ ವೇಳೆಯಲ್ಲಿ ಮೃತರಾದ ಸರ್ಕಾರಿ ನೌಕರರಾದ ಶ್ರೀಮತಿ ದಾನಮ್ಮ ಐ ನಂದರಗಿ, ಸಹ ಶಿಕ್ಷಕಿ ಮತ್ತು ಶ್ರೀ ವೈ.ವಿ ರಾಮಕೃಷ್ಣಪ್ಪ, ಸಹ ಶಿಕ್ಷಕರು ಇವರ ಅವಲಂಬಿತ ಕುಟುಂಬಗಳಿಗೆ ವಿತರಿಸಲು ಪರಿಹಾರ ಧನವಾಗಿ ತಲಾ ರೂ.20 ಲಕ್ಷರೂಪಾಯಿ ಗಳಂತೆ ಒಟ್ಟು ರೂ.40 ಲಕ್ಷಗಳನ್ನು ಜಿಲ್ಲಾಧಿಕಾರಗಳ ಪಿ.ಡಿ ಖಾತೆಗಳಿಗೆ ಬಿಡುಗಡೆ ಮಾಡಿ ಆದೇಶಿಸಿದೆ ಎಂದು ಹೇಳಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


