ಹಾಸನ: ಆರ್ಎಸ್ಎಸ್ ಮಾತ್ರವಲ್ಲ, ಯಾವುದೇ ಸಂಘಟನೆಗಳಾದರೂ ಶಾಲೆಗಳ ಆವರಣ, ಪಾರ್ಕ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇರೆಯವರಿಗೆ ತೊಂದರೆ ಕೊಟ್ಟು ತಮ್ಮ ಚಟುವಟಿಕೆಗಳನ್ನು ಮಾಡಬಾರದು ಎಂದು ಸೂಚನೆ ನೀಡಿರುವುದಾಗಿ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಘಪರಿವಾರದ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸುಳಿವನ್ನು ನೀಡಿದ್ದಾರೆ.
ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿನಲ್ಲಿ ತೆಗೆದುಕೊಂಡಿರುವ ಕ್ರಮಗಳ ಮಾಹಿತಿ ಪಡೆದು ರಾಜ್ಯದಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಸಚಿವರೊಂದಿಗಿನ ಔತಣಕೂಟಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ. ಪದೇ ಪದೇ ನಾವು ಸೇರುವುದು, ಊಟ ಮಾಡುವುದು, ಚರ್ಚೆ ಮಾಡುವುದು ಸಾಮಾನ್ಯ. ಈ ಸಂದರ್ಭದಲ್ಲಿ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ಮಾಡುತ್ತೇವೆ. ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆಗೆ ಸಂಬಂಧ ಪಟ್ಟ ಚರ್ಚೆಯಾಗಿಲ್ಲ ಎಂದರು.
ಹೈಕಮಾಂಡ್ ಸದ್ಯಕ್ಕೆ ಬಿಹಾರದ ವಿಧಾನಸಭೆ ಚುನಾವಣೆಯ ಕಾರ್ಯದೊತ್ತಡದಲ್ಲಿದೆ. ಆ ಕಡೆ ಹೆಚ್ಚು ಗಮನಕೇಂದ್ರಿ ಕರಿಸಿದೆ. ಅನಂತರ ಯಾವ ರೀತಿ ಸೂಚನೆ ನೀಡುತ್ತದೆಯೋ ಅದರಂತೆ ಮಾಡಲಾಗುತ್ತದೆ. ಸದ್ಯಕ್ಕೆ ಯಾವುದೇ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ಕೊಡುವ ಅಗತ್ಯವಾದರೂ ಏನಿದೆ ಎಂದು ಪ್ರಶ್ನಿಸಿದರು.
ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಜೆಡಿಎಸ್ನ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯ ಯಾವ ತೀರ್ಮಾನ ಮಾಡುತ್ತದೆಯೋ ಕಾದು ನೋಡುತ್ತೇವೆ ಎಂದರು.
ಬಿಜೆಪಿ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಲ್ಲರಿಗೂ ಸಮರ್ಪಕವಾಗಿ ಅನುದಾನ ನೀಡಿದ್ದರೇ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಜನರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ಗಳಲ್ಲಿ ಮೀಸಲಾತಿ ಸಂಬಂಧಪಟ್ಟ ವಿವಾದ ನ್ಯಾಯಾಲಯದಲ್ಲಿದೆ. ಕೋರ್ಟ್ ಯಾವಾಗ ಆದೇಶ ನೀಡುತ್ತದೆಯೋ ಆವಾಗ ಚುನಾವಣೆ ನಡೆಯುತ್ತದೆ. ಚುನಾವಣೆಗಳಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಹೀಗಾಗಿ ಬೆಂಗಳೂರಿನ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಹಂತಹಂತವಾಗಿ ನಡೆಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಹಾಸನಾಂಬ ದೇವಿಯ ದರ್ಶನಕ್ಕಾಗಿ ಶಿಷ್ಟಾಚಾರಕ್ಕನುಗುಣವಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರು ಅಲ್ಲಿಂದ ಜಿಲ್ಲಾಡಳಿತ ಆಯೋಜಿಸಿರುವ ಬಸ್ನಲ್ಲಿ ದೇವಸ್ಥಾನಕ್ಕೆ ತೆರಳಿದರು. ಮುಖ್ಯಮಂತ್ರಿಯವರನ್ನು ಕಂಡು ಜನ ಶಿಳ್ಳೆ, ಚಪ್ಪಾಳೆಗಳ ಮೂಲಕ ಹರ್ಷ ವ್ಯಕ್ತಪಡಿಸಿದರು. ಜನರತ್ತ ಕೈ ಬೀಸುತ್ತಲೇ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಎಸ್ಎಸ್ಎಲ್ಸಿ, ಪಿಯುಸಿ ಮಕ್ಕಳಿಗೆ ಗುಡ್ನ್ಯೂಸ್: ಪಾಸಿಂಗ್ ಮಾರ್ಕ್ಸ್ನಲ್ಲಿ ಇಳಿಕೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


