Monday, August 3, 2026
spot_img
More
    spot_img
    HomeStateDistrictದಾವಣಗೆರೆ ಹೆಸರನ್ನು ಬ್ರಾಂಡ್ ಮಾಡಿದ್ದು ಶಾಮನೂರು ಶಿವಶಂಕರಪ್ಪ

    ದಾವಣಗೆರೆ ಹೆಸರನ್ನು ಬ್ರಾಂಡ್ ಮಾಡಿದ್ದು ಶಾಮನೂರು ಶಿವಶಂಕರಪ್ಪ

    ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲದ ಅಧಿವೇಶನದಲ್ಲಿ ಸಂತಾಪ ಸೂಚಿಸಲಾಗಿದೆ. ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

    Advertisement

    ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಂಡಿಸಿದ ಸಂತಾಪ ಸೂಚನೆ ನಿರ್ಣಯದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತನಾಡಿದರು. ಸಂತಾಪ ಸೂಚನೆ ಬಳಿಕ ವಿಧಾನಸಭೆ ಕಲಾಪವನ್ನು ಮಂಗಳವಾರ ಬೆಳಗ್ಗೆ 9.30ಕ್ಕೆ ಮುಂದೂಡಿಕೆ ಮಾಡಲಾಗಿದೆ.

    ಸಿದ್ದರಾಮಯ್ಯ ಮಾತನಾಡಿ, “ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ. ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು” ಎಂದರು.

    “ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ” ಎಂದು ಬಣ್ಣಿಸಿದರು.

    “ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು, ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು” ಎಂದು ಸಿದ್ದರಾಮಯ್ಯ ಹೇಳಿದರು.

    “ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದೆ, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದೆ. ನನ್ನ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದೆ, ಅದಕ್ಕೂ ಸಾಕಷ್ಟು ಸಹಕಾರ ನೀಡಿದ್ದರು. ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು” ಎಂದು ಸಿದ್ದರಾಮಯ್ಯ ನೆನಪು ಮಾಡಿಕೊಂಡರು.

    “ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದರು.

    “15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರು ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು, ಭಗವಂತ ಅವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಪ್ರಾರ್ಥಿಸುತ್ತೇನೆ” ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

    ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು. 2023ರ ಚುನಾವಣೆಯಲ್ಲಿ ಅವರು 84,298 ಮತಗಳನ್ನು ಪಡೆದು ಬಿಜೆಪಿಯ ಅಜಯ್ ಕುಮಾರ್ ಬಿ.ಜಿ. (56,410 ಮತಗಳು) ಸೋಲಿಸಿ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

    ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ, ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌.ಎಸ್.ಮಲ್ಲಿಕಾರ್ಜುನ್ ಅವರನ್ನು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರನ್ನಾಗಿ ಮಾಡಲಾಗಿದೆ. ಅವರು ತೋಟಗಾರಿಕಾ ಖಾತೆಯನ್ನು ನಿರ್ವಹಣೆ ಮಾಡುತ್ತಿದ್ದಾರೆ.

    ಕಾಂಗ್ರೆಸ್ ಪಕ್ಷ 2024ರ ಲೋಕಸಭೆ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಸೊಸೆ, ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ದಾವಣಗೆರೆ ಕ್ಷೇತ್ರದ ಟಿಕೆಟ್ ನೀಡಿತು. ಅವರು ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading