ರಾಯಚೂರು: ಈ ಬಾರಿ ರಾಜ್ಯದಲ್ಲ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೂ ಹೊರಗೆ ಕೆಲಸ ಮಾಡದೇ ಮನೆ ಮತ್ತು ಕಚೇರಿಯಲ್ಲಿಯೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಯಚೂರಿನ ಮಾನ್ವಿಯಲ್ಲಿ ನಿನ್ನೆ (ಮಾರ್ಚ್.15) ಈ ಕುರಿತು ಮಾತನಾಡಿದ ಅವರು, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯವನ್ನು ಬದಲಾವಣೆಯ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಮಾಡಲಿದೆ. ಸರ್ಕಾರಿ ಅಧಿಕಾರಿಗಳು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೂ ಫೀಲ್ಡ್ ವಿಸಿಟ್ ಹೋಗುವುದನ್ನು ಬಿಡಬೇಕು ಎಂದರು.
ಅವರು ಬೆಳಗಿನ ಜಾವ ಅಥವಾ ಸಾಯಂಕಾಲದ ಒತ್ತು ಹೊರಗಡೆ ವೀಕ್ಷಣೆ ಮಾಡುವುದನ್ನು ಇಟ್ಟುಕೊಳ್ಳಬೇಕು. ಅಲ್ಲದೇ ಸರ್ಕಾರದಿಂದ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ. ಹೀಗಾಗಿ ರಜೆ ನೀಡಬೇಕೆಂದು ಹೇಳುವುದಿಲ್ಲ. ಆದರೆ ಸಮಯ ಬದಲಾವಣೆ ಮಾಡಿಕೊಂಡರೆ ಉತ್ತಮ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಹೆಚ್ಚಳವಾಗಲಿದೆ. ಈ ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ. ಇನ್ನು ಎಲ್ಲಾ ಶಾಲೆ-ಕಾಲೇಜುಗಳು ಹಾಗೂ ಸಂಸ್ಥೆಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅದರ ಜೊತೆಗೆ ಆಹಾರದ ಬಗ್ಗೆಯೂ ಗಮನ ನೀಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು ಎಂದು ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


