ಬೆಂಗಳೂರು: ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ರಾಜ್ಯದಿಂದ ಅಲ್ಲಿಗೆ ಹೋಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು ಎಂದರು.
ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವರು ಅಲ್ಲಿಗೆ ಹೋಗುವುದಿಲ್ಲ. ಪರಿಸರ ಕೂಡ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ನಾರಾ ಲೋಕೇಶ್ಗೆ ತಿರುಗೇಟು ಕೊಟ್ಟಿದ್ದಾರೆ.
ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ.ಬಿ.ಪಾಟೀಲನಿಗೂ ಸಾಮರ್ಥ್ಯವಿದೆ. ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ ಎಂದರು.
ನಾಳೆ ಭಾರತಕ್ಕೆ ಆಗಮಿಸಲಿರುವ ಗಗನಯಾತ್ರಿ ಶುಭಾಂಶು ಶುಕ್ಲಾ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


