ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯ, ಖಾಸಗಿ ದರ್ಬಾರ್ಗಾಗಿ ಈ ಸಿಂಹಾಸನ ಜೋಡಣೆ ನಡೆಯುತ್ತಿದ್ದು, ಸ್ಟ್ರಾಂಗ್ ರೂಂನಿಂದ ಬಿಗಿ ಭದ್ರತೆಯೊಂದಿಗೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ಸಿಂಹಾಸನ ಜೋಡಣೆ ನಡೆಯುತ್ತಿದೆ.
ಇಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚಿನ್ನದ ಸಿಂಹಾಸನದ ಬಿಡಿಭಾಗ ಹಾಗೂ ಬೆಳ್ಳಿಯ ಭದ್ರಾಸನದ ಬಿಡಿ ಭಾಗಗಳನ್ನು ದರ್ಬಾರ್ ಹಾಲ್ಗೆ ತಂದು ಜೋಡಣೆ ಮಾಡಲಾಗುತ್ತಿದೆ.
ಇನ್ನು ಸೆಪ್ಟೆಂಬರ್.22ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದ್ದು, ಮೈಸೂರು ಜಿಲ್ಲಾಡಳಿತ ಇದಕ್ಕಾಗಿ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.
ದಸರಾ ಉದ್ಘಾಟನೆಯಾದ ದಿನದಿಂದ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲೂ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಚಿನ್ನದ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


