ಮಂಗಳೂರು: ನಗರದ ಕೋಟೆಕಾರು ಉಲ್ಲಾಳದ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಶೀಘ್ರವೇ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಆರೋಪಿಗಳು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ಗಳನ್ನು ದಾಟಿ ಹೋಗಿದ್ದಾರೆ, ತಕ್ಷಣ ಟೋಲ್ಗಳನ್ನು ಯಾಕೆ ಬಿಗಿ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
ಆರೋಪಿಗಳನ್ನು ಪತ್ತೆ ಹಚ್ಚಲು ಎಲ್ಲಾ ಟೋಲ್ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಬೇಕು ಎಂದು ಹೇಳಿದರು.
ಇನ್ನೂ ಸಹಕಾರಿ ಬ್ಯಾಂಕ್ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ, ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿಗಳಿದ್ದರು. ಅಲ್ಲದೇ ಆರೋಪಿಗಳು ಕನ್ನಡ ಹಾಗೂ ಹಿಂದಿಯಲ್ಲಿ ಮಾತನಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಜನವರಿ.17) ಐದು ಮಂದಿ ಆಗಂತುಕರ ತಂಡ ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದ್ದಾರೆ. ಈ ಘಟನೆ ಉಳ್ಳಾಲ ತಾಲೂಕಿನ ಕೆ.ಸಿ.ರೋಡ್ ಶಾಖೆಯ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್ನಲ್ಲಿ ನಡೆದಿದೆ. ಅಲ್ಲದೇ ದರೋಡೆಕೋರರು ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ. ಚಿನ್ನ ಹಾಗೂ ನಗದು ಸೇರಿದಂತೆ ಬರೋಬ್ಬರಿ 10ರಿಂದ 12 ಕೋಟಿ ರೂ.ಹಣ ಎಗರಿಸಿಕೊಂಡು ಹೋಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


