ಕಲಬುರ್ಗಿ: ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಜಾತಿಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಾತಿಸಮೀಕ್ಷೆಯಲ್ಲಿ ಹಿಂದೂ ಜಾತಿಗಳಲ್ಲಿ ಕ್ರಿಶ್ಚಿಯನ್ ಸೇರಿಸಿರುವುದನ್ನು ವಿರೋಧಿಸಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕ್ರಿಶ್ಚಿಯನ್ನರು ಹಾಗೂ ಮುಸಲ್ಮಾನರನ್ನು ಸೇರಿಸಿದಂತೆ ಅಲ್ಪಸಂಖ್ಯಾತರು ಭಾರತದ ಪ್ರಜೆಗಳೇ. ಸಮೀಕ್ಷೆಗೆ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಿದ್ದು, ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ಅವರು ರಾಜ್ಯದ ಪ್ರತಿ ಮನೆಗೂ ತೆರಳಿ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ಕಳೆದ ಬಾರಿಗಿಂತ 40 ಸಾವಿರ ಶಿಕ್ಷಕರನ್ನು ಹೆಚ್ಚಾಗಿ ನಿಯೋಜಿಸಲಾಗಿದೆ ಎಂದರು.
ಇನ್ನು ಜಾತಿ ಸಮೀಕ್ಷೆ ನಮೂನೆಯಲ್ಲಿ ‘ನಾಸ್ತಿಕ’ ಕಾಲಂ ಅನ್ನು ಸೇರಿಸಿರುವ ಬಗ್ಗೆ ಬಿಜೆಪಿಯವರು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದು, ರಾಜ್ಯದ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿಯ ಬಗ್ಗೆ ಸರ್ಕಾರ ತಿಳಿಯಬೇಕಾಗಿದೆ. ಸಮೀಕ್ಷೆ ವರದಿ ಬಂದ ನಂತರ, ಅದರಂತೆ ಸರ್ಕಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುತ್ತದೆಂಬ ಉದ್ದೇಶ ಸರ್ಕಾರದ್ದಾಗಿದೆ ಎಂದರು.
ಇನ್ನು ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳಿಂದ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಸಮುದಾಯವನ್ನು ಎಸ್ಟಿಗೆ ಸೇರಿಸುವ ಅಂತಿಮ ತೀರ್ಮಾನ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಈ ಬಗ್ಗೆ ರಾಜ್ಯಸರ್ಕಾರ ಕೇವಲ ಶಿಫಾರಸ್ಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ಸಹ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದರು.
ಇನ್ನು ಅನ್ನಭಾಗ್ಯದ ಅಕ್ಕಿ ಹೊರದೇಶಕ್ಕೆ ರಫ್ತಾಗುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.
ಧರ್ಮಸ್ಥಳ ತನಿಖೆ ವಿರೋಧಿಗಳಿಗೆ ಶಾಕ್; ಬಂಗ್ಲೆಗುಡ್ಡ ತನಿಖೆಗೆ ಎಸ್ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


