ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗಿದ್ದು ಜೆಡಿಯು-ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಮಾಡುವ ಕಸರತ್ತು ಆರಂಭವಾಗಿದೆ. ಮುಖ್ಯಮಂತ್ರಿ ಯಾರು? ಎಂಬ ಕುತೂಹಲ ಇನ್ನೂ ಹಾಗೆಯೇ ಇದ್ದು, ಜೆಡಿಯು ಶಾಸಕಾಂಗ ಪಕ್ಷದ ಸಭೆ ಪಾಟ್ನಾದಲ್ಲಿ ನಡೆದಿದೆ.
ಸೋಮವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜಭವನಕ್ಕೆ ಭೇಟಿ ನೀಡಿದರು. ಶುಕ್ರವಾರ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಇದು ಮೊದಲ ಭೇಟಿಯಾಗಿದೆ. ಆದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ.
ಸಚಿವ ಸಂಪುಟ ಸಭೆಯಲ್ಲಿ ನವೆಂಬರ್ 19ಕ್ಕೆ ವಿಧಾನಸಭೆ ವಿಸರ್ಜನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ನವೆಂಬರ್ 22ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಮಾಡಬೇಕಿದೆ. ಜೆಡಿಯು-ಬಿಜೆಪಿ ನಾಯಕರು ತೀರ್ಮಾನ ಮಾಡಿಕೊಂಡು ಹೊಸ ಸರ್ಕಾರ ರಚನೆ ದಿನಾಂಕ ಘೋಷಣೆ ಮಾಡಲಿದ್ದಾರೆ.
ರಾಜ್ಯಪಾಲರ ಜೊತೆ ಚರ್ಚೆ: ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಜೆಡಿಯು ನಾಯಕ ವಿಜಯ್ ಕುಮಾರ್ ಚೌಧರಿ, “ಇಂದು ಸಚಿವ ಸಂಪುಟ ಸಭೆ ನಡೆಯಿತು. ಪ್ರಸ್ತುತ ವಿಧಾನಸಭೆಯನ್ನು ನವೆಂಬರ್ 19 ರಿಂದ ಜಾರಿಗೆ ಬರುವಂತೆ ವಿಸರ್ಜಿಸಬೇಕೆಂದು ಶಿಫಾರಸು ಮಾಡಿದೆ. ಇದನ್ನು ಮುಖ್ಯಮಂತ್ರಿಗಳ ಮೂಲಕ ರಾಜ್ಯಪಾಲರಿಗೆ ತಿಳಿಸಲಾಗಿದೆ” ಎಂದು ಹೇಳಿದರು.
“ಪ್ರಸ್ತುತ ಸರ್ಕಾರದ ಅವಧಿಯುದ್ದಕ್ಕೂ ಬಿಹಾರದ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಸಕಾರಾತ್ಮಕ ಸಹಕಾರ ನೀಡಿ, ಸರ್ಕಾರದ ನೀತಿಗಳು ಹಾಗೂ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಸರಿಸಿ ಅನುಷ್ಠಾನಗೊಳಿಸಿದ್ದಾರೆ. ಇದಕ್ಕಾಗಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಬಿಹಾರದ ಎಲ್ಲ ಅಧಿಕಾರಿಗಳು ಮತ್ತು ನೌಕರರ ಸೇವೆಯನ್ನು ಶ್ಲಾಘಿಸಲಾಗಿದೆ” ಎಂದರು.
“ಇತ್ತೀಚೆಗೆ ಮುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಅಪಾರ ಯಶಸ್ಸುಗಳಿಸಿ ಪ್ರಚಂಡ ಬಹುಮತ ಪಡೆದಿದೆ. ಮುಖ್ಯಮಂತ್ರಿಗಳಿಗೆ ಸಚಿವ ಸಂಪುಟ ಅಭಿನಂದನೆ ಸಲ್ಲಿಸಿದೆ ಮತ್ತು ಅವರ ನಾಯಕತ್ವದಲ್ಲಿ ಎನ್ಡಿಎ ತನ್ನ ಯಶಸ್ಸಿನ ಉತ್ತುಂಗಕ್ಕೆ ತಲುಪಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ” ಎಂದು ತಿಳಿಸಿದರು.
ಜೆಡಿಯು ಮತ್ತೊಬ್ಬ ನಾಯಕ ಅಶೋಕ್ ಚೌಧರಿ ಮಾತನಾಡಿ, “ಸಚಿವ ಸಂಪುಟವನ್ನು ವಿಸರ್ಜನೆ ಮಾಡಲಾಗಿದೆ. ಹೊಸ ಸಂಪುಟವನ್ನು ಶೀಘ್ರವೇ ರಚನೆ ಮಾಡಲಾಗುತ್ತದೆ. ಮೊದಲ ದಿನದಿಂದಲೂ ನಾವು ಹೇಳುತ್ತಿದ್ದೇವೆ. ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ” ಎಂದು ಹೇಳಿದರು.
ಜೆಡಿಯು ನಾಯಕರು ಈಗಾಗಲೇ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮುಂದುವರೆಯಬೇಕು ಎಂದು ಹೇಳುತ್ತಿದ್ದಾರೆ. 74 ವರ್ಷದ ನಿತೀಶ್ ಕುಮಾರ್ ಆರೋಗ್ಯದ ಕುರಿತು ಚುನಾವಣೆ ಸಮಯದಲ್ಲಿ ಹಲವು ಊಹಾಪೋಹಗಳು ಹಬ್ಬಿದ್ದವು. ಆದರೆ ಎನ್ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಬಿಜೆಪಿ ಸಿಎಂ ವಿಚಾರದಲ್ಲಿ ಯಾವ ತೀರ್ಮಾನ ಕೈಗೊಳ್ಳಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದೆ. ಇವುಗಳಲ್ಲಿ ಬಿಜೆಪಿ 89, ಜೆಡಿಯು 85, ಎಲ್ಜೆಪಿ (ಆರ್ವಿ) 19, ಹೆಚ್ಎಎಂ(ಎಸ್) 5 ಮತ್ತು ಆರ್ಎಲ್ಎಂ 4 ಸೀಟುಗಳು. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಜೆಡಿಯುಗೆ ಸಿಎಂ ಸ್ಥಾನ ಬಿಟ್ಟುಕೊಡಲಿದೆ. ಎರಡು ಉಪಮುಖ್ಯಮಂತ್ರಿ ಹುದ್ದೆ ರಚನೆಯಾಗಲಿದ್ದು, ಬಿಜೆಪಿಗೆ ಒಂದು, ಎಲ್ಜೆಪಿ(ಆರ್ವಿ) ಒಂದು ಡಿಸಿಎಂ ಹುದ್ದೆಗಳು ಸಿಗಲಿವೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅಲ್ಲದೇ ಹೈಕಮಾಂಡ್ ನಾಯಕರು ಸಹ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲು ಕೇಂದ್ರದಿಂದ ವೀಕ್ಷಕರನ್ನು ನೇಮಕ ಮಾಡಿಲ್ಲ. ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೇ ಬಿಜೆಪಿ ನಾಯಕರು ನಿತೀಶ್ ಕುಮಾರ್ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳುತ್ತಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


