ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಪ್ರಭಾವ ಬೀರಿದ್ದು, ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆಯಾಗಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಬೆಳ್ಳಂಬೆಳಿಗ್ಗೆಯೇ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹವಾಮಾನದ ಮೇಲೆ ಚಂಡಮಾರುತದ ಪ್ರಭಾವ ಬೀರಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.
ಉಳಿದಂತೆ ಜನವರಿ.24 ರವರೆಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶುಷ್ಕ ಹವಾಮಾನ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಇಬ್ಬನಿ ಬೀಳುವ ಮುನ್ಸೂಚನೆ ಲಭ್ಯವಾಗಿದೆ. ಆದರೆ ಬೀದರ್, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಿಗೆ ತೀವ್ರ ಶೀತ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


