ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ.ನಾಗೇಂದ್ರಗೆ ಇಡಿ ಶಾಕ್ ನೀಡಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್ಟಿಡಿಸಿಎಲ್) ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಹಾಗೂ ಹಣ ದುರುಪಯೋಗ ಪ್ರಕರಣದ ತನಿಖೆಯನ್ನು ಇಡಿ ನಡೆಸುತ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣ ತನಿಖೆ ನಡೆಸುತ್ತಿರುವ ಇಡಿ ಬೆಂಗಳೂರು ವಿಭಾಗ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿ ಬಿ.ನಾಗೇಂದ್ರಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಕೆಎಂವಿಎಸ್ಟಿಡಿಸಿಎಲ್ ಹಗರಣದ ಸಂಬಂಧ ಬಿ.ನಾಗೇಂದ್ರಗೆ ಸೇರಿದ 4 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ. ಇದರಲ್ಲಿ ವಾಣಿಜ್ಯ/ ವಾಸಯೋಗ್ಯ ಕಟ್ಟಡಗಳು ಸೇರಿವೆ. ಇವುಗಳ ಮೌಲ್ಯ ಸುಮಾರು 8.07 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದುವರೆಗೂ ಈ ಪ್ರಕರಣದಲ್ಲಿ 13.01 ಕೋಟಿ ರೂ. ಮೊತ್ತದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ಇಡಿ ಎಫ್ಐಆರ್: ಕರ್ನಾಟಕ ಪೊಲೀಸ್, ಸಿಬಿಐ ಕೆಎಂವಿಎಸ್ಟಿಡಿಸಿಎಲ್ ಹಗರಣದ ಕುರಿತು ತನಿಖೆ ಆರಂಭಿಸಿದ್ದವು. ಬಳಿಕ ಈ ಪ್ರಕರಣದಲ್ಲಿ ಇಡಿ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆಯನ್ನು ಆರಂಭಿಸಿತ್ತು.
ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಈ ಪ್ರಕರಣದ ಸಂಬಂಧ ಇಡಿ ದಾಳಿಯನ್ನು ಮಾಡಿತ್ತು. ಬಳಿಕ ಬಿ.ನಾಗೇಂದ್ರ ಸೇರಿದಂತೆ ಇತರ 5 ಜನರನ್ನು ಇಡಿ ಬಂಧಿಸಿತ್ತು. ಈ ಪ್ರಕರಣದಲ್ಲಿ 25 ಜನರ ವಿರುದ್ಧ ದೋಷಾರೋಪವನ್ನು ಹೊರಿಸಲಾಗಿದೆ. ಈ 25 ಆರೋಪಿಗಳಲ್ಲಿ ಬಿ.ನಾಗೇಂದ್ರ ಸಹ ಒಬ್ಬರು.
26/8/2025ರಂದು ಬಿ.ನಾಗೇಂದ್ರಗೆ ಸೇರಿದ ಒಟ್ಟು 4.94 ಕೋಟಿ ರೂ. ಮೊತ್ತದ ಸ್ಥಿರ/ ಚರ ಆಸ್ತಿಗಳನ್ನು ಇಡಿ ಮೊದಲು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಇದೇ ಹಗರಣದ ಸಂಬಂಧ ಸುಮಾರು 8.07 ಕೋಟಿ ರೂ. ಮೊತ್ತದ ಆಸ್ತಿಯನ್ನು ಮತ್ತೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಪರಿಶಿಷ್ಟ ಪಂಗಡಗಳ ಇಲಾಖೆ ಅಧೀನಕ್ಕೆ ಬರುತ್ತದೆ. ಈ ಇಲಾಖೆಗೆ ಬಿ.ನಾಗೇಂದ್ರ ಸಚಿವರಾಗಿದ್ದರು. ಈ ಇಲಾಖೆಯ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಉಂಟು ಮಾಡಿತ್ತು.
ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯ ಮಾಡಿದ್ದವು. 2023ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬಿ. ನಾಗೇಂದ್ರ ಅವರನ್ನು ಪರಿಶಿಷ್ಟ ಪಂಗಡಗಳ ಇಲಾಖೆ, ಯುವಜನ ಸೇವೆ, ಕ್ರೀಡೆ ಇಲಾಖೆ ಸಚಿವರನ್ನಾಗಿ ಮಾಡಲಾಗಿತ್ತು. ಕಾಂಗ್ರೆಸ್ ಹೈಕಮಾಂಡ್ ಸಹ ರಾಜೀನಾಮೆಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಜೂನ್ 6, 2024ರಂದು ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು.
ರಾಜೀನಾಮೆ ಬಳಿಕ ಮಾತನಾಡಿದ್ದ ಅವರು, “ಯಾವುದೇ ಒತ್ತಡಕ್ಕೆ ಮಣಿಯದೆ, ನಿಷ್ಪಕ್ಷಪಾತ ತನಿಖೆ ನಡೆಯುವಂತೆ ನೋಡಿಕೊಳ್ಳಲು ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳಿದ್ದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ನಾಗೇಂದ್ರ ಮೊದಲ ಬಾರಿಗೆ ಸಚಿವರಾಗಿದ್ದರು. ಸಿಎಂ ಸಿದ್ದರಾಮಯ್ಯ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೊದಲು ರಾಜೀನಾಮೆ ನೀಡಿದ ಸಚಿವ ಬಿ.ನಾಗೇಂದ್ರ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 94.73 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬುದು ಆರೋಪವಾಗಿದೆ.
ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಶಿವಮೊಗ್ಗದ ಮನೆಯಲ್ಲಿ 2024ರ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವ ಕುರಿತು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು. ಆಗ ಹಗರಣ ಬೆಳಕಿಗೆ ಬಂದಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


