ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ದಯಾನಂದ್ ಅವರು, ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಇದರ ಜೊತೆಗೆ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ.
ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೋದು ಎಲ್ಲಿಯೂ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಲೈಸೆನ್ಸ್ ಇರುವ ಗನ್ನ್ನು ಕೇಸ್ ಮುಗಿಯುವವರೆಗೂ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧಾರ ಮಾಡಿದ್ದಾರೆ.
ಇನ್ನು ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಲು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್ನಲ್ಲಿ ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ನೀವು ಜಾಮೀನಿನ ಮೇಲೆ ಹೊರಬಂದಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ನಿಮ್ಮ ಗನ್ ಲೈಸೆನ್ಸ್ ರದ್ದು ಮಾಡಬೇಕಿದೆ. ನೋಟಿಸ್ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.
ಪೊಲೀಸರ ನೋಟಿಸ್ಗೆ ಉತ್ತರಿಸಿದ ದರ್ಶನ್, ನಾನು ಸೆಲೆಬ್ರಿಟಿ ಆಗಿರುವುದರಿಂದ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ. ಯಾವುದೇ ಕಾರಣಕ್ಕೂ ಗನ್ ದುರ್ಬಳಕೆ ಮಾಡಿಕೊಳ್ಳಲ್ಲ. ಹಾಗಾಗಿ ಗನ್ ಲೈಸೆನ್ಸ್ ರದ್ದು ಮಾಡಬೇಡಿ ಎಂದು ಮನವಿ ಮಾಡಿದ್ದರು. ಆದರೆ ಈಗ ಗನ್ ಲೈಸೆನ್ಸ್ನ್ನು ತಾತ್ಕಾಲಿಕವಾಗಿ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


