ನ್ಯೂ ಚಂಡೀಗಢ್: ಮುಲ್ಲಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ( ಏಪ್ರಿಲ್ 20 ) ನಡೆದ ಐಪಿಎಲ್ನ 37ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ವಿಕೆಟ್ಗಳ ಗೆಲುವು ದಾಖಲಿಸುವ ಮೂಲಕ ಗೆಲುವಿನ ಟ್ರ್ಯಾಕ್ಗೆ ಮರಳಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 158 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18.5 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಬಾರಿಸಿತು.
ಪಂಜಾಬ್ ಕಿಂಗ್ಸ್ ನೀಡಿದ ಸಾಮಾನ್ಯ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಕಳೆದ ಪಂದ್ಯದ ಹಾಗೆ ಈ ಪಂದ್ಯದಲ್ಲೂ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಜತೆಯಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಜೋಡಿ 103 ರನ್ಗಳ ಜತೆಯಾಟವನ್ನಾಡಿ ತಂಡವನ್ನು ಗೆಲುವಿನತ್ತ ಸಾಗಿಸಿದರು. ಕೊಹ್ಲಿ 54 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 73 ರನ್ ಬಾರಿಸಿದರೆ, ಪಡಿಕ್ಕಲ್ 35 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಬಾರಿಸಿ ಔಟ್ ಆದರು.
ಹೀಗೆ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕೊಹ್ಲಿಗೆ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ನೀಡಲಾಗಿದೆ. ಆದರೆ ವಿರಾಟ್ ಕೊಹ್ಲಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ತನಗಿಂತ ಚೆನ್ನಾಗಿ ಆಡಿದ ದೇವದತ್ ಪಡಿಕ್ಕಲ್ಗೆ ಈ ಪ್ರಶಸ್ತಿಯನ್ನು ನೀಡಬೇಕಿತ್ತು, ಇಂದು ಬದಲಾವಣೆ ತಂದದ್ದೇ ಆತ ಆತನನ್ನು ಬಿಟ್ಟು ನನಗೆ ಹೇಗೆ ಕೊಟ್ಟರೂ ಗೊತ್ತಾಗುತ್ತಿಲ್ಲ ಎಂದು ಬೇಸರ ಹೊರಹಾಕಿದರು.
ಇನ್ನು ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೊಹ್ಲಿ ಒಂದು ಗೆಲುವು ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ ಎಂದರು. ಅಲ್ಲದೇ ಎರಡು ಅಂಕಗಳು ಮಹತ್ವವಾದದ್ದು ಎಂದ ಕೊಹ್ಲಿ ಎಂಟರಿಂದ ಹತ್ತು ಅಂಕಗಳಾಗುವುದು ಪ್ಲೇಆಫ್ ಅರ್ಹತೆ ಗಿಟ್ಟಿಸಿಕೊಳ್ಳುವತ್ತ ಹೆಜ್ಜೆ ಇಡಲು ಬೇಕಾದ ಮೈಲಿಗಲ್ಲು ಎಂದರು. ತಂಡದಲ್ಲಿ ಎಲ್ಲರೂ ಒಳ್ಳೆಯ ಪ್ರದರ್ಶನ ನೀಡುತ್ತಿದ್ದಾರೆ ಎಂದ ಕೊಹ್ಲಿ ಎಲ್ಲರಲ್ಲಿಯೂ ಗೆಲುವಿನ ಹಸಿವು ಕಾಣಿಸುತ್ತಿದೆ, ಮೈದಾನದಲ್ಲಿ ಅವರು ರನ್ ಉಳಿಸಲು ಡೈವ್ ಮಾಡುವುದನ್ನು ನೋಡಿದರೇ ನಿಮಗೆ ತಿಳಿಯಲಿದೆ ಎಂದು ತಂಡ ವಿಶ್ವಾಸದಿಂದ ಮುನ್ನುಗಲು ಸಿದ್ಧವಿದೆ ಎಂದು ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


