ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಿದ್ದಾ ಜಿದ್ದಿನಿಂದ ಕೂಡಿದ್ದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ನಾಳೆ ( ನವೆಂಬರ್ 23 ) ಪ್ರಕಟವಾಗಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನಾ 12 ಗಂಟೆಗೆ ಬಹುತೇಕ ಸ್ಪಷ್ಟವಾದ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾರಿಗೆ ವಿಜಯಲಕ್ಷ್ಮೀ ಒಲಿಯಲಿದ್ದಾಳೆ ಎಂಬುದು ತಿಳಿಯಲಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತೆಣಿಕೆ ರಾಮನಗರದ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಅದೇ ರೀತಿ ಶಿಗ್ಗಾಂವಿ ಮತ ಎಣಿಕೆಯೂ ಹಾವೇರಿ ಜಿಲ್ಲೆಯ ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜು ಹಾಗೂ ಸಂಡೂರು ಕ್ಷೇತ್ರದ ಎಣಿಕೆಯೂ ಬಳ್ಳಾರಿ ಜಿಲ್ಲೆಯ ಸರ್ಕಾರಿ ಪಾಳಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ.
ಚುನಾವನೋತ್ತರ ಸಮೀಕ್ಷೆಗಳ ಪ್ರಕಾರ ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ.
ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸೋಲನ್ನಪ್ಪಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಇದೆ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಜೆಡಿಎಸ್ ಭದ್ರಕೋಟೆಯಾಗಿದ್ದರೂ ಇದು ಡಿಕೆ ಬ್ರದರ್ಸ್ಗೆ ಪ್ರತಿಷ್ಠೆಯ ಕಣವಾಗಿತ್ತು.
ಶಿಗ್ಗಾಂವಿಯಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಶಿಗ್ಗಾಂವಿಯಲ್ಲಿ ಈ ಬಾರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ವಿರುದ್ಧ ಕಾಂಗ್ರೆಸ್ ಯಾಸಿರ್ ಅಹಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿತ್ತು. ಮುಸ್ಲಿಮರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಲಿಂಗಾಯತರ ಮತಗಳೂ ನಿರ್ಣಾಯಕವಾಗಿವೆ. ಈ ಬಾರಿ ಇಲ್ಲಿನ ಮತದಾರರು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಎಕ್ಸಿಟ್ ಪೋಲ್ ಫಲಿತಾಂಶ ಹೇಳಿದೆ.
ಇನ್ನು, ಸಂಡೂರು ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಾಲಾಗುವ ಸಾಧ್ಯತೆಯಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ನ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಕೂಡ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸದಲ್ಲಿದೆ.
ಭರ್ಜರಿ ಬೆಟ್ಟಿಂಗ್
ಈ ನಡುವೆ ಗೆಲ್ಲುವ ಕುದುರೆ ಯಾರೆಂಬ ಲೆಕ್ಕಾಚಾರ ತೀವ್ರಗೊಂಡಿದೆ. ಕ್ಷೇತ್ರಗಳಲ್ಲಿ ಬೆಟ್ಟಿಂಗ್ ಭರ್ಜರಿಯಾಗಿ ನಡೆಯುತ್ತಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಂತೂ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ.ಯಾರಿಗೆ ಗೆಲುವು, ಗೆಲ್ಲುವ ಅಂತರ ಎಷ್ಟು? ಇತ್ಯಾದಿ ಆಧಾರದಲ್ಲಿ ಬೆಟ್ಟಿಂಗ್ ನಡೆಯುತ್ತಿದೆ. ಕುತೂಹಲ ಎಂದರೆ ಈ ಮೂರು ಕ್ಷೇತ್ರಗಳಲ್ಲಿ ಮಾತವಲ್ಲದೆ, ಬೆಟ್ಟಿಂಗ್ ಭರಾಟೆ ನಡೆಯುತ್ತಿಲ್ಲ, ಈ ಚುನಾವಣೆಯ ಬಗ್ಗೆ ಆಸಕ್ತಿ ಹೊಂದಿದ ಇತರ ಜಿಲ್ಲೆಗಳ ಬೆಟ್ಟಿಂಗ್ ದಂದೆಕೋರರು ಬಾಜಿ ಕಟ್ಟಿದ್ದಾರೆ ಎಂಬ ಮಾಹಿತಿಯೂ ಇದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಲ್ಲಿ ಭಾರೀ ಅಂತರದಲ್ಲಿ ಗೆದ್ದು ಈಗ ಚನ್ನಪಟ್ಟಣ ಕ್ಷೇತ್ರವನ್ನು ಮಗನಿಗೆ ಬಿಟ್ಟು ಕೊಟ್ಟಿದ್ದಾರೆ. ಇದರಿಂದ ಈ ಬಾರಿ ಚುನಾವಣೆಗೆ ಮಂಡ್ಯದ ನಂಟು ಪ್ರಬಲವಾಗಿದೆ. 25 ಸಾವಿರಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮಂಡ್ಯದಿಂದ ಚನ್ನಪಟ್ಟಣಕ್ಕೆ ಬಂದು ಚುನಾವಣೆ ಮಾಡಿದ್ದಾರೆ. ಈಗ ಬೆಟ್ಟಿಂಗ್ ಭರಾಟೆಯೂ ಮಂಡ್ಯದವರ ಪ್ರವೇಶದಿಂದ ಹೆಚ್ಚಿದೆ.
ಈ ಚುನಾವಣೆಯಲ್ಲಿ ಜೆಡಿಎಸ್ನ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಡುವೆಯೇ ಜಿದ್ದಾಜಿದ್ದಿನ ಸ್ಪರ್ಧೆ ನಡೆದಿದೆ. ಯಾರೂ ಗೆದ್ದರೂ ಕೂದಲೆಳೆಯ ಅಂತರ ಎನ್ನುವ ಕುತೂಹಲವಿದೆ..
ಯಾರು ಗೆದ್ದರೂ ಕೂದಲೆಳೆ ಅಂತರದಿಂದ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹಾಗೂ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ನೇರ ಸ್ಪರ್ಧೆ ಏರ್ಪಟಿದ್ದು, ಯಾರೇ ಗೆದ್ದರೂ ಕೂದಲೆಳೆ ಅಂತರದಲ್ಲಿ ಎಂಬ ಮಾತುಗಳು ಕೇಳಿಬರುತ್ತಿವೆ. ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಎರಡು ಕಡೆಯವರು ಬಾರಿ ಪೈಪೋಟಿ ನಡೆಸಿದ್ದು, ಎರಡು ಕಡೆಯೂ ಮತಗಳು ಹಂಚಿಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಕಾಂಗ್ರೆಸ್ ಭದ್ರಕೋಟೆಯಾಗಿರುವ ಸಂಡೂರಿನಲ್ಲಿ ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯತ್ತ ಬೆಟ್ಟಿಂಗ್ ವಲವು ವ್ಯಕ್ತವಾಗುತ್ತಿದೆ. ಅನ್ನಪೂರ್ಣ ಅವರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರದಲ್ಲಿ ಹೆಚ್ಚಿನ ಬೆಟ್ಟಿಂಗ್ ನಡೆಯುತ್ತಿದೆ. 70% ಬೆಟ್ಟಿಂಗ್ ಅನ್ನಪೂರ್ಣ ಪರವಾಗಿ ಇದೆ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಲಕ್ಷ್ಮಣ್ ಈ ಬಾರಿ ಕ್ಷೇತ್ರದಲ್ಲಿ ಪೈಪೋಟಿ ನೀಡಿದರೂ ಗೆಲ್ಲುವ ಸಾಧ್ಯತೆ ಕಾಂಗ್ರೆಸ್ ಪರವಾಗಿದೆ ಎಂಬ ಅಭಿಪ್ರಾಯ ಕ್ಷೇತ್ರದಲ್ಲಿದೆ.
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದರೂ, ಕಾಂಗ್ರೆಸ್ ಆಂತರಿಕ ಜಗಳ, ಕಿತ್ತಾಟ ಬಿಜೆಪಿಗೆ ಲಾಭವಾಗಿದೆ ಎಂಬ ಅಭಿಪ್ರಾಯ ಇದೆ. ಆದರೂ ಇಲ್ಲೂ ಸೋಲು ಗೆಲುವಿನ ಅಂತರ ದೊಡ್ಡ ಪ್ರಮಾಣದಲ್ಲಿ ಇರಲು ಸಾಧ್ಯವಿಲ್ಲ. ಹೀಗಾಗಿ ಶಿಗ್ಗಾಂವಿಯಲ್ಲೂ ಬೆಟ್ಟಿಂಗ್ ಎಚ್ಚರಿಕೆಯಿಂದಲೇ ನಡೆಯುತ್ತಿದೆ. ಚುನಾವಣೆಯ ಕೊನೆಯ ಹಂತದ ಬೆಳವಣಿಗೆಗಳ ಆಧಾರದಲ್ಲಿ ಭರತ್ ಬೊಮ್ಮಾಯಿ ಅವರ ಪರವಾಗಿ ಬೆಟ್ಟಿಂಗ್ ಒಲವು ಕಾಣಿಸುತ್ತಿದೆ ಎಂಬ ಮಾಹಿತಿ ಇದೆ.
1000 ರಿಂದ ಆರಂಭಗೊಂಡು ಲಕ್ಷಾಂತರ ರೂಪಾಯಿಯವರೆಗೂ ಬೆಟ್ಟಿಂಗ್ ನಡೆಯುತ್ತದೆ. ಕೆಲವರು ನೇರ ಬೆಟ್ಟಿಂಗ್ ನಡೆಸಿದರೆ, ದೊಡ್ಡ ಮಟ್ಟದಲ್ಲಿ ಪರ್ಸಂಟೇಜ್ ಲೆಕ್ಕದಲ್ಲಿ ಬೆಟ್ಟಿಂಗ್ ನಡೆಯುತ್ತದೆ. ಉದಾಹರಣೆಗೆ ಎಕ್ಷ್' ಅಭ್ಯರ್ಥಿ ಗೆಲ್ಲುತ್ತಾನೆ ಎಂದು ಓರ್ವ 1000 ರೂಪಾಯಿ ಬೆಟ್ಟಿಂಗ್ ಕಟ್ಟಿದರೆ ಎದುರಾಳಿವೈ’ ಅಭ್ಯರ್ಥಿ ಗೆಲ್ಲುತ್ತಾನೆ ಎಂದು ಮತ್ತೋರ್ವ 400 ಬೆಟ್ಟಿಂಗ್ ಕಟ್ಟಬಹುದು. ಅದಾಗ ಎಕ್ಷ್' ಅಭ್ಯರ್ಥಿ ಸೋತಲ್ಲಿ 1000 ರೂಪಾಯಿ ಎದುರಾಳಿಗೆ ನೀಡಬೇಕು. ಇತ್ತವೈ’ ಅಭ್ಯರ್ಥಿ ಸೋತಲ್ಲಿ 400 ರೂಪಾಯಿ ಕೊಡಬೇಕಾಗುತ್ತದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


