“ಪಕ್ಷಕ್ಕಿಂತ ಯಾರು ದೊಡ್ಡವರಲ್ಲ.ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸೋಮವಾರ ಮೈಸೂರಿನಲ್ಲಿ ಮಾತನಾಡಿದ ಅವರು, “ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ” ಎಂದರು.
“ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ” ಎಂದು ಹೇಳಿದರು.
“ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ?. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದರು.
“ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಅವರ ಸರ್ಕಾರ ಮಾಡಿತ್ತು” ಎಂದು ಸಿದ್ದರಾಮಯ್ಯ ಹೇಳಿದರು.
ಮೈಲಾರಿ ದೋಸೆ ಸವಿದ ಸಿಎಂ: ಸೋಮವಾರ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು. ಬಳಿಕ ಮೈಲಾರಿ ಹೋಟೆಲ್ನಲ್ಲಿ ಬೆಳಗಿನ ಉಪಹಾರ ಸೇವಿಸಿದರು.
ನವೆಂಬರ್ 20 ರಿಂದ ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎರಡು ಉಪಹಾರಕೂಟವನ್ನು ನಡೆಸಿ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಘೋಷಣೆ ಮಾಡಿದರು.
ಆದರೆ ಬೆಳಗಾವಿಯಲ್ಲಿ ಆರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿಯೂ ಪುನಃ ನಾಯಕತ್ವ ಬದಲಾವಣೆ ಚರ್ಚೆಗಳು ಪ್ರಾರಂಭವಾದವು. ಅಧಿವೇಶನ ಮುಗಿದರೂ ಸಹ ಇನ್ನೂ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳಿಗೆ ಫುಲ್ಸ್ಟಾಪ್ ಬಿದ್ದಿಲ್ಲ.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಉತ್ತರ ನೀಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ, “ಎರಡನೇ ಬಾರಿ ನಾನು ಮುಖ್ಯಮಂತ್ರಿಯಾಗಿದ್ದು, ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಬಿಜೆಪಿಯವರು 9 ವರ್ಷದಲ್ಲಿ 5 ಜನ ಮುಖ್ಯಮಂತ್ರಿಗಳಾಗಿದ್ದರು. ಬಿಜೆಪಿಯ ಹುಳಿಹಿಂಡುವ ಪ್ರಯತ್ನ ಸಫಲವಾಗುವುದಿಲ್ಲ” ಎಂದು ಹೇಳಿದ್ದರು.
“ನಮ್ಮ ಸರ್ಕಾರ ಗಟ್ಟಿಯಾಗಿದ್ದು, ಅಸ್ಥಿರವಾಗುವ ಪ್ರಶ್ನೆಯೇ ಇಲ್ಲ. ಇದು ಬಿಜೆಪಿಯ ಭ್ರಮೆ. ತನ್ನ ಪೂರ್ಣ ಅವಧಿಯನ್ನು ಮುಗಿಸಿ, ನಂತರ 2028 ರಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ಘೋಷಣೆ ಮಾಡಿದ್ದರು.
ಈ ನಡುವೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ನಾಯಕತ್ವದ ಗೊಂದಲಗಳನ್ನು ಹೈಕಮಾಂಡ್ ಸೃಷ್ಟಿಸಿಲ್ಲ. ಅವೆಲ್ಲ ಸ್ಥಳೀಯವಾಗಿ ಸೃಷ್ಟಿಯಾಗುತ್ತಿದೆ. ಈ ಗೊಂದಲಗಳನ್ನು ಸ್ಥಳೀಯ ನಾಯಕರೇ ಪರಿಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ನತ್ತ ಬೊಟ್ಟು ಮಾಡಿದರೆ ಹೇಗೆ?” ಎಂದು ಪ್ರಶ್ನಿಸಿದ್ದಾರೆ.
“ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಒಳಗೊಂಡು ಎಲ್ಲರೂ ಸೇರಿ ಕಟ್ಟಿದ ಪಕ್ಷ. ಪಕ್ಷ ಸಂಘಟನೆ ಕೆಲಸ ನನ್ನಿಂದ ಆಗಿದೆ, ತನ್ನಿಂದ ಆಗಿದೆ ಎಂದು ಯಾರೂ ಹೇಳಬಾರದು. ಕಾರ್ಯಕರ್ತರೂ ಪಕ್ಷ ಕಟ್ಟಿದ್ದು ಅವರು, ಇವರು ಎಂದು ಹೇಳುವುದನ್ನು ಬಿಡಬೇಕು” ಎಂದು ಪರೋಕ್ಷವಾಗಿ ಖರ್ಗೆ ಹೇಳಿದ್ದು ರಾಜ್ಯದಲ್ಲಿ ಪುನಃ ಚರ್ಚೆಯನ್ನು ಹುಟ್ಟುಹಾಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


