Friday, August 7, 2026
spot_img
More
    spot_img
    HomeStateಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು; ಶಿಸ್ತುಕ್ರಮದಿಂದ ಪಾರಾದ್ರಾ ಜಮೀರ್?

    ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು; ಶಿಸ್ತುಕ್ರಮದಿಂದ ಪಾರಾದ್ರಾ ಜಮೀರ್?

    ಬೆಂಗಳೂರು: ನಿರ್ಣಾಯಕ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಕ್ಷದ ಶಿಸ್ತುಕ್ರಮದಿಂದ ಸಚಿವ ಜಮೀರ್ ಅಹ್ಮದ್ ಬಚಾವ್ ಆದರೇ ಎಂಬ ಮಾತುಗಳು ಕೇಳಿಬರುತ್ತಿವೆ.

    Advertisement

    ಹೌದು.. ಕರ್ನಾಟಕ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಪ್ರಮುಖವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಜಯಭೇರಿ ಭಾರಿಸಿದ್ದಾರೆ.ಆದರೆ ಮತದಾನಕ್ಕೂ ಮುನ್ನ ನಡೆದ ಕೆಲ ಘಟನೆಗಳು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆ ತರುವ ಶಂಕೆ ಮೂಡಿಸಿದ್ದವು.

    ಪ್ರಮುಖವಾಗಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗಳು ಮತ್ತು ಅವರ ಕಾರ್ಯಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಮತದಾರರು ತೀರ್ಪು ನೀಡುವ ಶಂಕೆ ಇತ್ತು. ಇದಕ್ಕೆ ಇಂಬು ನೀಡುವಂತೆ ಮತದಾನ ಮುಗಿದ ಎರಡು ದಿನದ ನಂತರ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಆತ್ಮವಿಶ್ವಾಸವನ್ನು ಕಳೆದುಕೊಂಡಂತೆ ಹೇಳಿಕೆಯನ್ನು ನೀಡಿದ್ದರು.

    ತಮ್ಮ ಪತ್ರಿಕಾಗೋಷ್ಠಿಯಲ್ಲಿ ದೇವೇಗೌಡರು, ಕುಮಾರಸ್ವಾಮಿಯ ಬಗ್ಗೆ ಸಕಾರಾತ್ಮಕ ಮಾತನ್ನಾಡಿದ್ದರು. ಇದರ ಜೊತೆಗೆ, ಬಹಿರಂಗ ಪ್ರಚಾರದ ಕೊನೆಯ ಸಚಿವ ಜಮೀರ್ ಅಹ್ಮದ್ ಖಾನ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಆಡಿದ್ದ ಮಾತು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಕರಿಯ ಎಂದು ಕುಮಾರಸ್ವಾಮಿ ವಿರುದ್ದ ಜಮೀರ್, ಜನಾಂಗೀಯ ನಿಂದನೆಯ ಮಾತನ್ನಾಡಿದ್ದರು.

    ಇದರ ಜೊತೆಗೆ, ದೇವೇಗೌಡರ ಕುಟುಂಬವನ್ನೇ ಖರೀದಿಸುವ ಶಕ್ತಿ ನಮಗಿದೆ (ಮುಸ್ಲಿಮರು) ಎಂದು ಹೇಳಿದ್ದು ಕೂಡಾ ಆಕ್ರೋಶಕ್ಕೆ ಕಾರಣವಾಗಿತ್ತು. ಜಮೀರ್ ಅಹ್ಮದ್ ಅವರ ಹೇಳಿಕೆ, ಸ್ವಲ್ಪಮಟ್ಟಿನ ಡ್ಯಾಮೇಜಿಗೆ ಕಾರಣವಾಗಿದೆ ಎಂದು ಯೋಗೇಶ್ವರ್ ಪ್ರತಿಕ್ರಿಯಿಸಿದ್ದರು. ಇನ್ನು, ಜಮೀರ್ ಅವರ ಹೇಳಿಕೆಯನ್ನು ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಾ ವಿರೋಧಿಸಿದ್ದರು. ಜಮೀರ್ ಹೇಳಿಕೆಯಿಂದಾಗಿ ಜೆಡಿಎಸ್ ಪಾರ್ಟಿಗೆ ಪ್ಲಸ್ ಆಗಿದೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಕೂಡಾ ಹೇಳಿದ್ದರು.

    ಇದರ ಜೊತೆಗೆ ರಾಜ್ಯದಲ್ಲಿ ವಕ್ಫ್ ವಿವಾದ ಕೂಡ ಜಮೀರ್ ಮುಳುವಾಗಿತ್ತು. ವಕ್ಫ್ ಆಸ್ತಿ ಹೆಸರಲ್ಲಿ ರೈತರಿಗೆ ಜಮೀನು ಮಾಲೀಕರಿಗೆ ನೋಟಿಸ್ ನೀಡಿದ್ದು, ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಇದರಿಂದಾದ ಡ್ಯಾಮೇಜ್ ಕಂಟ್ರೋಲ್ ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸರಣಿ ಹೇಳಿಕೆಗಳನ್ನು ನೀಡಿ ತೇಪೆ ಹಚ್ಚುವ ಕೆಲಸ ಮಾಡಿದರಾದರೂ ಪ್ರತಿಭಟನೆ ಮಾತ್ರ ನಿಂತಿರಲಿಲ್ಲ. ಇದು ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಕಾರಣವಾಗಬಹುದು ಎಂದು ಹೇಳಲಾಗಿತ್ತು.

    ಇಷ್ಟೆಲ್ಲಾ ವಿಚಾರಗಳ ನಡುವೆಯೇ ಚನ್ನಪಟ್ಟಣದಲ್ಲಿ ಭರ್ಜರಿ ಅಂದರೆ ಶೇ. 85ರಷ್ಟು ಮತದಾನವಾಗಿತ್ತು. ಚನ್ನಪಟ್ಟಣದಲ್ಲಿ ದೇವೇಗೌಡ, ಯಡಿಯೂರಪ್ಪ ಆದಿಯಾಗಿ ಮೈತ್ರಿ ನಾಯಕರು ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಪ್ರಚಾರವನ್ನು ನಡೆಸಿದ್ದರು. ಅಲ್ಲದೆ ಭಾರಿ ಪ್ರಮಾಣದ ಮತದಾನವಾಗಿರುವುದು ಜೆಡಿಎಸ್ ಪಕ್ಷಕ್ಕೆ ಲಾಭವಾಗಲಿದೆ ಎಂಬ ಭಾವನೆ ಕೂಡ ವ್ಯಕ್ತವಾಗಿತ್ತು.

    ಸಿದ್ದರಾಮಯ್ಯನವರ ಆಪ್ತವಲಯದಲ್ಲಿರುವ ಜಮೀರ್ ಅವರನ್ನು ವಜಾಗೊಳಿಸುವಂತೆ ಅಥವಾ ರಾಜೀನಾಮೆ ಪಡೆಯುವಂತೆ ಸಿಎಂ ಮೇಲೆ ಒತ್ತಡ ಹೆಚ್ಚುತ್ತಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆಗೂ ಜಮೀರ್ ಗೆ ಉತ್ತಮ ಬಾಂಧವ್ಯವಿಲ್ಲ ಎನ್ನುವುದು ಗೊತ್ತಿರುವ ವಿಚಾರ.

    ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಎಂದು ಜಮೀರ್ ಅಹ್ಮದ್ ಸಾಕಷ್ಟು ಬಾರಿ ಹೇಳಿದ್ದು ಕೂಡಾ, ಕಾಂಗ್ರೆಸ್ಸಿನ ಒಂದು ವಲಯದ ಕೋಪಕ್ಕೆ ಕಾರಣವಾಗಿತ್ತು. ಹಲವು ಎಚ್ಚರಿಕೆಯ ನಂತರವೂ ಜಮೀರ್ ತಮ್ಮ ಮಾತನ್ನು ಮುಂದುವರಿಸಿದ್ದರು. ಕೊನೆಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆದು ವಾರ್ನಿಂಗ್ ಕೊಟ್ಟಿದ್ದರು.

    ಈ ಎಲ್ಲಾ ಕಾರಣದಿಂದಾಗಿ, ಚನ್ನಪಟ್ಟಣದ ಸೋಲು-ಗೆಲುವಿನ ವಿಚಾರ ಸಚಿವ ಜಮೀರ್ ಅಹ್ಮದ್ ಖಾನ್ ರಾಜಕೀಯ ಭವಿಷ್ಯಕ್ಕೆ ಸಂಬಂಧಿಸಿದ್ದಾಗಿತ್ತು. ಆದರೆ ಇದೀಗ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವಿನ ಮೂಲಕ ಜಮೀರ್ ಮತ್ತೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗಿದೆ ಎಂದು ರಾಜಕೀಯವಲಯದಲ್ಲಿ ಕೇಳಿಬರುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading