ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರನ್ನು ದೂಷಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಹಾದಿಯಲ್ಲಿದ್ದೆವು. ಆದರೆ ಅವರು ನಮ್ಮನ್ನು ತಿರಸ್ಕರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಪಕ್ಷದ ಮೇಲೆ ಗೌರವ ಇರುವ ಜನರು ನಮ್ಮನ್ನು ಕೈಬಿಟ್ಟಿಲ್ಲ. ಯಾವುದೇ ಕಾರ್ಯಕರ್ತ ನಿಂತರೂ ಸಾಂಪ್ರದಾಯಿಕವಾಗಿ ಹತ್ತಿರ 60 ಸಾವಿರ ಮತಗಳು ಬರುತ್ತಿದ್ದವು. ಈಗ ಅದು 87 ಸಾವಿರಕ್ಕೆ ಮುಟ್ಟಿದೆ. ದೇವೇಗೌಡರು ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ಪರ ಮೀಸಲಾತಿ, ಇನ್ನಿತರ ವಿಚಾರದ ಬಗ್ಗೆಯೂ ತೀರ್ಮಾನ ಮಾಡಿದ್ದರು. ಆದರೆ ಅವರಿಗೆ ನಮ್ಮ ಅವಶ್ಯಕತೆಯಿಲ್ಲ ಎಂಬುದು ಈ ಚುನಾವಣೆಯಿಂದ ಸ್ಪಷ್ಟವಾಗಿದೆ. ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದರು.
ಇನ್ನು ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಿಲ್ಲ. ದೇಶ ಹಾಗೂ ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಅಧಿಕಾರದ ದಾಹಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದು ಸಿಪಿವೈಗೆ ತಿರುಗೇಟು ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


