ಬೆಂಗಳೂರು: ನಾನಾ ರೀತಿಯ ಗೊಂದಲ, ತಾಂತ್ರಿಕ ಸಮಸ್ಯೆ, ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ನಿರುತ್ಸಾಹ ಮೊಬೈಲ್ ಆಪ್ನ ಜಂಜಾಟಗಳ ನಡುವೆ ಎರಡನೇ ದಿನವೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುಂಟುತ್ತಾ ಸಾಗುತ್ತಿದೆ.
ಸೋಮವಾರದಿಂದ ಆರಂಭವಾಗಿರುವ ಸಮೀಕ್ಷೆ ಅ.7ರ ವರೆಗೂ ನಡೆದು , ಒಟ್ಟು 2 ಕೋಟಿ ಮನೆಗಳ 7 ಕೋಟಿಗೂ ಅಧಿಕ ಜನರ ದತ್ತಾಂಶವನ್ನು ಸಂಗ್ರಹಿಸಬೇಕಿದೆ. ಆದರೆ ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದೆ ಗೊಂದಲಮಯವಾಗಿದೆ ಹಾಗೂ ಜನ ಸಾಮಾನ್ಯರನ್ನು ರೇಜಿಗಿಡಿಸಿದೆ.
ಹಲವು ಸಮುದಾಯಗಳ ವಿರೋಧದ ನಡುವೆ ಕೂಡ ಹಠಕ್ಕೆ ಬಿದ್ದಂತೆ ನಡೆಯುತ್ತಿರುವ ಸಮೀಕ್ಷೆ ಬಗ್ಗೆ ಜನರಲ್ಲಿ ಅಸಹನೆ, ಆಕ್ರೋಶಗಳು ಮಡುಗಟ್ಟಿವೆ.
ರಾಜ್ಯದ ಒಟ್ಟು ಜನ ಸಂಖ್ಯೆಯಲ್ಲಿ ಶೇ. 20ಕ್ಕೂ ಹೆಚ್ಚು ಪಾಲು ಹೊಂದಿರುವ ಬೆಂಗಳೂರಿನಲ್ಲಿ ಈವರೆಗೂ ಸಮೀಕ್ಷೆ ಆರಂಭಗೊಂಡಿಲ್ಲ, ಬಹುತೇಕ ಸಮೀಕ್ಷಾದಾರರಿಗೆ ತರಬೇತಿಯನ್ನು ನೀಡಿಲ್ಲ. ಈ ಹಿಂದೆ ನ್ಯಾ.ನಾಗಮೋಹನದಾಸ್ ಆಯೋಗದ ಸಮೀಕ್ಷೆಯಲ್ಲೂ ಇದೇ ರೀತಿಯ ಅನಾದಾರಣೆಗಳು ಕಂಡು ಬಂದಿತ್ತು. ಕೊನೆ ಕೊನೆಗೆ ಅಧೋಗತಿಯಲ್ಲಿ ಕಾಟಾಚಾರದ ಸಮೀಕ್ಷೆ ನಡೆಸಿ, ವರದಿ ನೀಡಿದ್ದು ಕಂಡು ಬಂತು.
ಕೊನೆಯ ಹಂತದಲ್ಲಿ ಹೆಚ್ಚು ಮನೆಗಳನ್ನು ತಲುಪಬೇಕು ಎಂಬ ಕಾರಣಕ್ಕೆ ಹಿರಿಯ ಅಧಿಕಾರಿಗಳು ಸಮೀಕ್ಷಾದಾರರ ಮೇಲೆ ಒತ್ತಡ ಹೇರಿದರು. ಇದು ಹೇಗೊ ಮುಗಿದರೆ ಸಾಕು ಎಂಬ ಅಸಡ್ಡೆಯಲ್ಲಿ ಸಮೀಕ್ಷಾದಾರರು ದೂರವಾಣಿಯಲ್ಲೇ ಮಾಹಿತಿ ಪಡೆದು ಕೈತೊಳೆದುಕೊಂಡ ಉದಾಹರಣೆಗಳಿವೆ. ಹೀಗಾಗಿ ನ್ಯಾ.ನಾಗಮೋಹನದಾಸ್ ಸಮೀಕ್ಷೆ ಗೊಂದಲದ ಗೂಡಾಗಿದ್ದು, ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ.
ಈಗ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯೊಂದಿಗೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿದೆ. ತಾಂತ್ರಿಕ ಕಾರಣಗಳಿಂದಾಗಿ ಆಧಾರ ಸಂಖ್ಯೆ ಜೋಡಣೆಯಾಗಿರುವ ಮೊಬೈಲ್ ನಂಬರ್ಗೆ ಓಟಿಪಿ ರವಾನೆಯಾಗುತ್ತಿಲ್ಲ. ಪ್ರತಿಯೊಬ್ಬ ಸಮೀಕ್ಷಾದಾರರಿಗೂ ಸುಮಾರು 50 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಸರಾಸರಿ ದಿನವೊಂದಕ್ಕೆ ಕನಿಷ್ಠ 10 ಮನೆಗಳನ್ನು ಸಮೀಕ್ಷೆ ಮಾಡುವ ಅನಿವಾರ್ಯತೆ ಇದೆ. ಆದರೆ ಓಟಿಪಿ ರವಾನೆಯಾಗದೆ ವಿಳಂಬವಾಗುತ್ತಿರುವುದರಿಂದ ಹಾಗೂ ಮೊಬೈಲ್ ಆಪ್ ಹ್ಯಾಂಗ್ ಆಗುತ್ತಿರುವುದರಿಂದಾಗಿ ನಿಗದಿತ ಸಮಯಕ್ಕೆ ಸಮೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬರುತ್ತಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


