ಬೆಂಗಳೂರು: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಮೇಲೆ ಸುಮಾರು ನಲವತ್ತು-ಐವತ್ತು ಜನರಿಂದ ಹಲ್ಲೆ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಪರಿಷತ್ ಅಧಿವೇಶನದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಸರ್ಕಾರ ಹುಚ್ಚರ ಸಂತೆಯಾಗಿದೆ. ಸಿ.ಟಿ.ರವಿ ಮೇಲೆ ಸುಮಾರು ನಲ್ವತ್ತು- ಐವತ್ತು ಜನ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಸಿ.ಟಿ.ರವಿ ಅವರನ್ನು ಕೊಲೆ ಮಾಡುವ ಯತ್ನ ಕೂಡ ನಡೆದಿದೆ. ಇದರಲ್ಲಿ ಸಚಿವರು ಮತ್ತು ಅವರ ಪಿಎ ಪಾತ್ರ ಇದೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಈ ಪ್ರಕರಣದಲ್ಲಿ ಅದೇ ಠಾಣೆಯಲ್ಲಿ ಎಫ್ಐಆರ್ ಮಾಡಬೇಕೆಂದು ನಾವೆಲ್ಲರೂ ಆಗ್ರಹಿಸಿದ್ದೆವು. ನಮ್ಮನ್ನು ಖಾನಾಪುರ ಪೊಲೀಸ್ ಠಾಣೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ಕಾಯಿಸಿ, ನಂತರ ದೂರು ಸ್ವೀಕರಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಬುದ್ಧಿ ಭ್ರಮಣೆಯಾಗಿದೆ. ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಕೂಡ ಸುರಕ್ಷಿತ ಅಲ್ಲ. ಯಾರಾದರೂ ಅಪರಾಧಿಯನ್ನು ಬಂಧಿಸಿದರೆ ಅವರನ್ನು ಕಬ್ಬಿನ ಗದ್ದೆಯಲ್ಲಿ ಇರಿಸಬೇಕು ಎಂದು ರೂಲ್ಸ್ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವರನ್ನು ಕೇಳಿದರೆ ನನಗೆ ಏನೂ ಗೊತ್ತಿಲ್ಲ ಎಂದು ನಿರ್ಲಕ್ಷ್ಯದ ಉತ್ತರ ನೀಡುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಕಿಂಚಿತ್ತೂ ಬೆಲೆ ಕೊಡುತ್ತಿಲ್ಲ. ಇದು ಹುಚ್ಚರ ಸಂತೆಯಾಗಿದೆ ಎಂದು ಕಿಡಿಕಾರಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


