ಬೆಳಗಾವಿ: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖೆಯ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೆದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ಸಹ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ಇನ್ನು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ. ತನಿಖೆಯ ಬಳಿಕವೇ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


