ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿದೆ. ಈ ಮಧ್ಯೆ ಜಮುನಾ ಎಂಬುವವರು ಸಿಎಂ ಕುಟುಂಬದ ವಿರುದ್ಧ ದೂರು ನೀಡಿ ಪ್ರಕರಣ ಮತ್ತೊಂದು ತಿರುವು ಪಡೆಯುವಂತೆ ಮಾಡಿದ್ದಾರೆ.
ಮುಡಾ ಪ್ರಕರಣದ 50:50 ಅನುಪಾತದ ಬದಲಿ ನಿವೇಶನಗಳ ಸಂಬಂಧ ತಮ್ಮ ಗಮನಕ್ಕೆ ತರದೆ ಭೂಮಿಯನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ A4 ಆರೋಪಿಯಾಗಿರುವ ಜೆ.ದೇವರಾಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು ಜಮುನಾ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ 7ನೇ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಕೆಸರೆ ಗ್ರಾಮದ ಸರ್ವೆ ನಂಬರ್ ಸರ್ವೆ ನಂ.464ರ 3.16 ಎಕರೆ ಭೂಮಿ ಇದಾಗಿದ್ದು, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೂಡ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿ ನಮಗೂ ಭಾಗ ಬರಬೇಕು. ಪಿತ್ರಾರ್ಜಿತ ಆಸ್ತಿಯಲ್ಲಿ ನನಗೂ ಪಾಲು ಕೊಡಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಪ್ರಕರಣದಲ್ಲಿ ಕುಟುಂಬ ಬಹುತೇಕ ಬಂಧಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


