ಕರ್ನಾಟಕ ಕಾಂಗ್ರೆಸ್ನ ಅಧಿಕಾರ ಹಂಚಿಕೆ ಕಗ್ಗಂಟು ಇನ್ನೂ ಬಗೆಹರಿದಿಲ್ಲ. ದೆಹಲಿ, ರಾಜ್ಯ ನಾಯಕರ ಮಟ್ಟದಲ್ಲಿ ಸಭೆಗಳು ನಡೆಯುತ್ತಿದ್ದು, ಹೈಕಮಾಂಡ್ ಈ ವಾರ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಚ್ಚರಿ ಮೂಡಿಸಿದ್ದಾರೆ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಣದ ನಾಯಕರ ಹೇಳಿಕೆಗಳ ನಡುವೆಯೇ ಮಾಜಿ ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕರು ಬೆಚ್ಚಿಬಿದ್ದಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, “ಎಲ್ಲವನ್ನು ಹೇಳಿ ಆಗಿದೆ. ಬನ್ನಿ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋಣ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಎದುರಿಸೋಣ. ಬಹುಮತ ಬಂದರೆ ಅವರೇ 5 ವರ್ಷ ಮುಖ್ಯಮಂತ್ರಿಯಾಗಲಿ” ಎಂದು ಹೇಳಿದರು.
ಕೆ.ಎನ್.ರಾಜಣ್ಣ ಹೇಳಿಕೆ
- ವಿಧಾಸನಭೆ ವಿಸರ್ಜನೆ ಮಾಡೋಣ. ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಒಟ್ಟಾಗಿ ಚುನಾವಣೆ ಎದುರಿಸೋಣ. ಬಹುಮತ ಬಂದರೆ 5 ವರ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ.
- ಸಿದ್ದರಾಮಯ್ಯರನ್ನು ಚುನಾಯಿಸಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಲ್ಲವೇ?. ಈಗಲೂ ತೀರ್ಮಾನ ಸಿಎಲ್ಪಿ ಸಭೆಯಲ್ಲಿಯೇ ಆಗಬೇಕು. ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದು ಹೇಳಿದೆ. ಆದ್ದರಿಂದ ನಾನು ಮಾತನಾಡುವುದಿಲ್ಲ.
- ನಾನು ವೈಯಕ್ತಿಕವಾಗಿ ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು ಎಂದು ಬಯಸುತ್ತೇನೆ. ಎಐಸಿಸಿ ಕೆಲವೇ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸಲಿದೆ. ಎರಡನೇ ಆಯ್ಕೆ ಎಂದರೆ ಡಾ.ಜಿ.ಪರಮೇಶ್ವರ ಸಿಎಂ ಆಗಬೇಕು ಎಂದು ಕೆ.ಎನ್.ರಾಜಣ್ಣ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಮೇ 20ರಂದು ಅಧಿಕಾರವಹಿಸಿಕೊಂಡಿದ್ದರು. ನವೆಂಬರ್ 20ಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಆದ್ದರಿಂದ ಈಗ ಅಧಿಕಾರ ಹಂಚಿಕೆ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.
ಆದರೆ ಪಕ್ಷ ಮತ್ತು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಬೆಂಗಳೂರಿನಲ್ಲಿದ್ದು, 11 ಗಂಟೆಗೆ ಅವರು ಹೆಚ್ಎಎಲ್ ಮೂಲಕ ದೆಹಲಿಗೆ ವಾಪಸ್ ಆಗಲಿದ್ದಾರೆ.
ದೆಹಲಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಬಿಹಾರ ಚುನಾವಣೆ ಸೋಲು, ಕರ್ನಾಟಕ ರಾಜಕೀಯದ ಕುರಿತು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಹೈಕಮಾಂಡ್ ನಾಯಕರು ತೀರ್ಮಾನವೊಂದನ್ನು ಕೈಗೊಂಡು ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರಿಗೂ ಸಹ ದೆಹಲಿಗೆ ಬರುವಂತೆ ಬುಲಾವ್ ನೀಡಲಿದ್ದಾರೆ. ನಾಯಕತ್ವ ಬದಲಾವಣೆ ಕುರಿತ ಚರ್ಚೆಗೆ ಮುಂದಿನ ವಾರ ಸ್ಪಷ್ಟತೆ ಸಿಗುವ ನಿರೀಕ್ಷೆ ಇದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಸಂಜೆ, ‘ನಾನು ಅಪ್ಪಟ ಕಾಂಗ್ರೆಸ್ಸಿಗ. ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ!. ಬಿಜೆಪಿ ಹಾಗೂ ಜನತಾದಳದ ನಾಯಕರು ನಮ್ಮ ಪಕ್ಷದ ವಿಚಾರವನ್ನು ಮಾತನಾಡುವ ಅವಶ್ಯಕತೆಯಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಇಂದು ಬೆಳಗ್ಗೆ ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!’ ಎಂದು ಹೇಳುವ ಮೂಲಕ 2023ರಲ್ಲಿ ಮುಖ್ಯಮಂತ್ರಿ ಆಯ್ಕೆ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಒಪ್ಪಂದದ ಕುರಿತು ಹೈಕಮಾಂಡ್ ನಾಯಕರಿಗೆ ನೆನಪಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ಆಗಬೇಕು. ಅಲ್ಲಿಯ ತನಕ ಸಂಪುಟ ಪುನಾರಚನೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೂಲಕ ಹೈಕಮಾಂಡ್ ನಾಯಕರಿಗೂ ಈ ಸಂದೇಶ ತಲುಪಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


