ಕರ್ನಾಟಕದ ರಾಜಕೀಯದಲ್ಲಿ ಶನಿವಾರ ಮಹತ್ವದ ದಿನ. ಕರ್ನಾಟಕ ಕಾಂಗ್ರೆಸ್ ಗೊಂದಲ ಬಗೆಹರಿಸಲು ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯಿತು. ಬಳಿಕ ಜಂಟಿ ಪತ್ರಿಕಾಗೋಷ್ಠಿಯೂ ನಡೆಯಿತು.
ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್, ‘ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಉಪಾಹಾರ ಸಭೆ ನಡೆಸಲಾಯಿತು’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಬಳಿಕ ಸಿದ್ದರಾಮಯ್ಯ ಜೊತೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿದರು. ಕಾಂಗ್ರೆಸ್ನ ಗೊಂದಲ ಕರ್ನಾಟಕದಲ್ಲಿಯೇ ಬಗೆಹರಿಯಿತೇ?, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡುವುದಿಲ್ಲವೇ? ಎಂಬುದು ಹೈಕಮಾಂಡ್ ನಾಯಕರ ಸೂಚನೆಗೆ ಬಿಟ್ಟ ವಿಚಾರವಾಗಿದೆ.
ಡಿ.ಕೆ.ಶಿವಕುಮಾರ್ ಪೋಸ್ಟ್: ಪತ್ರಿಕಾಗೋಷ್ಠಿ ಬಳಿಕ ಡಿ.ಕೆ.ಶಿವಕುಮಾರ್ ಪೋಸ್ಟ್ ಹಾಕಿದ್ದು, “ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ” ಎಂದು ಹೇಳಿದ್ದಾರೆ.
“ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ” ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
“ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ. ಪ್ರತಿಯೊಬ್ಬ ಶಾಸಕರನ್ನು, ಕಾರ್ಯಕರ್ತರನ್ನು ಮತ್ತು ನಮ್ಮ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಬೇಕು. ಅದೂ ನಮ್ಮಿಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಲು ಹಲವು ಕಾರ್ಯತಂತ್ರಗಳನ್ನು ರೂಪಿಸಿದ್ದೇವೆ” ಎಂದು ತಿಳಿಸಿದ್ದಾರೆ.
ಡಿಕೆಶಿ ದೇಗುಲ ಭೇಟಿ: ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿ ಮುಗಿಸಿ ಸಿಎಂ ಕಾವೇರಿ ನಿವಾಸದಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ವಾಪಸ್ ಆಗಿದ್ದಾರೆ. ಈಗ ಕುಟುಂಬ ಸಮೇತ ಅವರು ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಮಾಹಿತಿಗಳ ಪ್ರಕಾರ ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಭೂವರಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಶನಿವಾರ ಬ್ರೇಕ್ ಫಾಸ್ಟ್ ಮೀಟಿಂಗ್ ಬಿಟ್ಟರೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ.
ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ ಎಂಬ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತುಗಳು ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲದ ಪೂರ್ಣವಿರಾಮವೇ?, ಅಲ್ಪ ವಿರಾಮವೇ? ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಸದ್ಯಕ್ಕೆ ಹೈಕಮಾಂಡ್ ನಾಯಕರು ಇಬ್ಬರನ್ನು ದೆಹಲಿಗೆ ಕರೆಯುವ ಸಾಧ್ಯತೆ ಕಡಿಮೆ ಇದೆ. ಗೊಂದಲ ಇಲ್ಲೇ ಬಗೆಹರಿದಿದ್ದು, ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉಭಯ ನಾಯಕರು ಬ್ಯುಸಿಯಾಗಲಿದ್ದಾರೆ.
“ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ಈ ಕುರಿತು ಪೋಸ್ಟ್ ಹಾಕಿದ್ದಾರೆ.
“ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಈ ವರೆಗೆ ಎದುರಿಸಿದ್ದೇವೆ, ಮುಂದೆಯೂ ಎದುರಿಸುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ 20ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ಬಳಿಕ ಆರಂಭವಾಗಿದ್ದ ಅಧಿಕಾರ ಹಂಚಿಕೆ ಗೊಂದಲಕ್ಕೆ ನವೆಂಬರ್ 29ಕ್ಕೆ ತೆರೆಬಿದ್ದಿದೆ ಎಂದು ರಾಜ್ಯದ ಜನರು ಅಂದುಕೊಳ್ಳಬಹುದು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


