ಬೆಂಗಳೂರು: ಕಾಂಗ್ರೆಸ್ನಲ್ಲಿ ಸೃಷ್ಟಿಯಾಗಿರುವ ರಾಜಕೀಯ ಕ್ರಾಂತಿಯ ಚರ್ಚೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ರಂಗಪ್ರವೇಶ ಮಾಡಿದ್ದು, ಜಿಲ್ಲಾವಾರು ಶಾಸಕರ ಜೊತೆಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತಾರೂಢ ಸರ್ಕಾರದ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ಧ್ವನಿ ಎತ್ತುತ್ತಿದ್ದು ಮೂರು ದಿನಗಳ ಕಾಲ ರಾಜ್ಯ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿ ಅವರ ಅಹವಾಲುಗಳನ್ನು ಆಲಿಸಿದರು.
ಇತ್ತೀಚೆಗೆ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡುವ ಮೂಲಕ ವಿವಾದ ಹುಟ್ಟುಹಾಕಿದ ಸಿದ್ದರಾಮಯ್ಯ ಆಪ್ತರಾದ ಹಿರಿಯ ನಾಯಕ ಬಿ.ಆರ್. ಪಾಟೀಲ್ ಅವರೊಂದಿಗೆ ಚರ್ಚೆ ಆರಂಭವಾಯಿತು.
ಪಾಟೀಲ್ ಅವರನ್ನು ಬೆಂಬಲಿಸಿದ, ಶಾಸಕ ರಾಜು ಕಾಗೆ ಅವರು ಸರ್ಕಾರದಿಂದ ಅನುಮೋದಿತ ಅಭಿವೃದ್ಧಿ ಕಾರ್ಯಗಳಿಗೆ ಕೆಲಸದ ಆದೇಶಗಳನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿದರು. ಹೈಕಮಾಂಡ್ನ ಸೂಚನೆಗಳನ್ನು ಅನುಸರಿಸಿ, ಸಿದ್ದರಾಮಯ್ಯ ಅವರಿಬ್ಬರನ್ನೂ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ಕರೆದಿದ್ದರು.
ಇತ್ತೀಚೆಗೆ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೆಪ್ಟೆಂಬರ್ ನಂತರ ರಾಜ್ಯ ರಾಜಕೀಯದಲ್ಲಿ “ಕ್ರಾಂತಿ” ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕೆಲವರು ಇದನ್ನು ಪಕ್ಷದ ಹೈಕಮಾಂಡ್ಗೆ ಪರೋಕ್ಷ ಸಂದೇಶ ಎಂದು ವ್ಯಾಖ್ಯಾನಿಸುತ್ತಾರೆ, ಏಕೆಂದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷ ಪೂರೈಸಿದ ನಂತರ ಅಕ್ಟೋಬರ್ನಲ್ಲಿ ರಾಜೀನಾಮೆ ನೀಡಿದರೆ ಅದು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.
ಶಾಸಕರ ಜೊತೆ ವ್ಯಕ್ತಿಗತ ಚರ್ಚೆ ನಡೆಸಿದ ಸುರ್ಜೇವಾಲ, ಸುಮಾರು 20ಕ್ಕೂ ಹೆಚ್ಚು ಪ್ರಶ್ನೆಗಳ ನಮೂನೆಯನ್ನು ಸಿದ್ಧಪಡಿಸಿಕೊಳ್ಳಲಾಗಿತ್ತು. ಪ್ರತಿಯೊಬ್ಬರಿಂದಲೂ ಅದಕ್ಕೆ ವಿವರಣೆ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಶಾಸಕರ ಅಭಿಪ್ರಾಯಗಳನ್ನು ಖುದ್ದು ಆಲಿಸಿದರು.
ಸಚಿವರು ತಮ ಕ್ಷೇತ್ರಗಳಿಗೆ ಎಷ್ಟು ಬಾರಿ ಬಂದಿದ್ದಾರೆ, ಯಾರ್ಯಾರು ಬಂದಿದ್ದಾರೆ, ಯಾರೆಲ್ಲಾ ಬಂದಿಲ್ಲ, ಮನವಿ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವ ಶಾಸಕರ್ಯಾರು, ಸ್ಪಂದಿಸದೇ ಇರುವವರ್ಯಾರು ಎಂಬ ವಿಚಾರವನ್ನು ಸುರ್ಜೇವಾಲ ಪ್ರಮುಖವಾಗಿ ಚರ್ಚೆ ನಡೆಸಿದರು.
ಇಲಾಖಾವಾರು ತಮ ಕ್ಷೇತ್ರಕ್ಕೆ ಬಂದಿರುವ ಅನುದಾನವೆಷ್ಟು?, ಅದರಲ್ಲಿ ಬಿಡುಗಡೆಯಾದ ಹಣ, ಖರ್ಚಾಗಿರುವ ಹಣವೆಷ್ಟು?, ಬಾಕಿ ಬಿಡುಗಡೆಯಾಗಬೇಕಿರುವ ಹಣ ಮತ್ತು ಅನುಮತಿ ದೊರೆಯಬೇಕಾದ ಬಾಕಿ ಪ್ರಸ್ತಾವನೆಗಳೆಷ್ಟು? ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ತಮ ಕ್ಷೇತ್ರಕ್ಕೆ ಎಷ್ಟು ಫಲಾನುಭವಿಗಳಿಗೆ ಸೌಲಭ್ಯ ದೊರಕಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ ಮತದಾರರು ನಂತರ ಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಹೊಂದಿರುವ ಅಭಿಪ್ರಾಯಗಳೇನು?, ಗ್ಯಾರಂಟಿ ಯೋಜನೆಗಳು ಜನರನ್ನು ಖುಷಿ ಪಡಿಸಲಿವೆಯೇ?, ಇವು ಕಾಂಗ್ರೆಸ್ಗೆ ರಾಜಕೀಯ ಲಾಭ ತಂದುಕೊಡಲಿವೆಯೇ? ಎಂಬ ಪ್ರಶ್ನೆಗಳನ್ನು ಶಾಸಕರ ಮುಂದಿಟ್ಟರು.
ಶಾಸಕರಾಗಿ ಆಯ್ಕೆಯಾದ ಮೇಲೆ ಕ್ಷೇತ್ರಗಳಲ್ಲಿ ಎಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೀರ?, ಹಿಂದಿನ ಕಾಮಗಾರಿಗಳು ಎಷ್ಟು ಮುಗಿದಿವೆ?, ಹೊಸ ಯೋಜನೆಗಳನ್ನು ಯಾವ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗಿದೆ? ಎಂಬ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕುವ ಮೂಲಕ ಸರ್ಕಾರದಿಂದ ಹಣ ಬಿಡುಗಡೆಯಾಗುತ್ತಿದೆಯೇ? ಇಲ್ಲವೇ ಎಂಬ ಸ್ಪಷ್ಟನೆ ಪಡೆದುಕೊಳ್ಳಲು ಸುರ್ಜೇವಾಲ ಯತ್ನಿಸಿದ್ದಾರೆ.
ಅಸಮಾಧಾನಿತರ ಜೊತೆ ಸುರ್ಜೇವಾಲಾ ಚರ್ಚೆ
ಬಹಿರಂಗ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿರುವ ಶಾಸಕರಾದ ಬಿ.ಆರ್.ಪಾಟೀಲ್, ರಾಜುಕಾಗೆ, ಇಕ್ಬಾಲ್ ಹುಸೇನ್, ಕೆ.ವೈ.ನಂಜೇಗೌಡ, ಬೇಳೂರು ಗೋಪಾಲಕೃಷ್ಣ, ಶ್ರೀನಿವಾಸ್, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ರವಿಕುಮಾರ ಗಣಿಗ, ಬಸವರಾಜ್ ಶಿವಗಂಗ ಸೇರಿದಂತೆ ಇನ್ನೂ ಕೆಲವರ ಜೊತೆ ಸುರ್ಜೇವಾಲ ಖಾಸಗಿ ಸಮಾಲೋಚನೆ ನಡೆಸಿದ್ದಾರೆ.
ಖುದ್ದು ಸುರ್ಜೇವಾಲ ಅವರು ಶಾಸಕರುಗಳಿಗೆ ಕರೆ ಮಾಡಿ ಸಭೆಗೆ ಆಗಮಿಸುವಂತೆ ಬುಲಾವು ನೀಡಿದ್ದರು. ಬಿ.ಆರ್.ಪಾಟೀಲ್, ರಾಜು ಕಾಗೆ ಅವರ ಹೇಳಿಕೆಗಳು ಕಾಂಗ್ರೆಸ್ಗೆ ತೀವ್ರ ಮುಜುಗರ ಉಂಟುಮಾಡಿದೆ. ಸಚಿವ ಕೆ.ಎನ್.ರಾಜಣ್ಣ ಅವರು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ ನಂತರವಂತೂ ಕಾಂಗ್ರೆಸ್ನಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ.
ಅದಕ್ಕೆ ಪೂರಕವಾಗಿ ಹಲವಾರು ಶಾಸಕರು ಹೇಳಿಕೆಗಳ ಮೇಲೆ ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿದ್ದಾರೆ. ಸೆಪ್ಟೆಂಬರ್ ವೇಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗುತ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಅವರವರ ಬಣದ ಮುಖಂಡರುಗಳು ಪ್ರತಿಪಾದಿಸಲಾರಂಭಿಸಿದ್ದಾರೆ. ಹೀಗಾಗಿ ಇದು ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡುತ್ತಿದೆ.
ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿರೋಧಪಕ್ಷಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ನ ಶಾಸಕರು, ನಾಯಕರುಗಳ ಟೀಕೆ ಮಾಡುತ್ತಿರುವುದು ಪಕ್ಷಕ್ಕೆ ನುಂಗಲಾರದ ಬಿಸಿತುಪ್ಪವಾಗಿದೆ. ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಸಭೆ ಮಹತ್ವ ಪಡೆದುಕೊಂಡಿದೆ.
ಬಿಆರ್ ಪಾಟೀಲ್ ಭ್ರಷ್ಟಾಚಾರ ಆರೋಪ, ರಾಜು ಕಾಗೆ ರಾಜೀನಾಮೆ ಬೆದರಿಕೆಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


